ADVERTISEMENT

ಗಣರಾಜ್ಯೋತ್ಸವ ದಿನದ ಘರ್ಷಣೆ: ಆರೋಪಿ ದೀಪ್ ಸಿಧುಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 8:48 IST
Last Updated 17 ಏಪ್ರಿಲ್ 2021, 8:48 IST
ದೀಪ್ ಸಿಧು
ದೀಪ್ ಸಿಧು   

ನವದೆಹಲಿ: ಗಣರಾಜ್ಯೋತ್ಸವದ ದಿನ ರೈತರ ಟ್ರಾಕ್ಟರ್ ರ್‍ಯಾಲಿಯ ಸಂದರ್ಭ ದೆಹಲಿಯ ಕೆಂಪು ಕೋಟೆ ಸಂಕೀರ್ಣದಲ್ಲಿ ನಡೆದ ಹಿಂಸಾಚಾರ ಪ್ರಕರಣದ ಆರೋಪಿ ನಟ ಮತ್ತು ಸಾಮಾಜಿಕ ಹೋರಾಟಗಾರ ದೀಪ್ ಸಿಧು ಅವರಿಗೆ ದೆಹಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

36ರ ಹರೆಯದ ದೀಪು ಸಿಧು ಅವರನ್ನು ಫೆಬ್ರವರಿ 9 ರಂದು ದೆಹಲಿಯಿಂದ 100 ಕಿ.ಮೀ ದೂರದ ಹರಿಯಾಣದ ಕರ್ನಾಲ್‌ನಲ್ಲಿ ಬಂಧಿಸಲಾಗಿತ್ತು. ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ತಾವು ನಡೆಸುತ್ತಿರುವ ಪ್ರತಿಭಟನೆಯ ದಾರಿ ತಪ್ಪಿಸಲು ದೀಪ್ ಸಿಧು ಯತ್ನಿಸಿದ್ದಾರೆ ಎಂದು ರೈತರು ಆರೋಪಿಸಿದ್ದರು.

ಇಬ್ಬರು ವ್ಯಕ್ತಿಗಳಿಂದ ವೈಯಕ್ತಿಕ ಬಾಂಡ್, ತಲಾ ₹ 30,000 ಶೂರಿಟಿ ಪಡೆದು ದೆಹಲಿ ಕೋರ್ಟ್ ಜಾಮೀನು ನೀಡಿದೆ. ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು ಮತ್ತು ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಲಾಗಿದೆ.

ADVERTISEMENT

ಜನವರಿ 26 ರಂದು ಪ್ರತಿಭಟನಾಕಾರರು ತಾವು ಒಪ್ಪಿದ ಮಾರ್ಗಗಳನ್ನು ಬಿಟ್ಟು ದೆಹಲಿ ಪ್ರವೇಶಿಸಿದ್ದರು. ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಮಾಡಿದ್ದರು. ರೈತರನ್ನು ದಾರಿ ತಪ್ಪಿಸಿ ಕೆಂಪುಕೋಟೆ ಕಡೆಗೆ ಕರೆದೊಯ್ದು ಘರ್ಷಣೆಗೆ ಕಾರಣವಾದ ಆರೋಪ ದೀಪ್ ಸಿಧು ಅವರ ಮೇಲಿದೆ. ಪದೇ ಪದೇ ಮನವಿ ಮಾಡಿದರೂ ಬಗ್ಗದ ಪ್ರತಿಭಟನಾಕಾರರು ಘರ್ಷಣೆಗೆ ಇಳಿದಿದ್ದರಿಂದ ಪೊಲೀಸರು ಅಶ್ರುವಾಯು ಪ್ರಯೋಗಿಸಿ, ಲಾಠಿ ಚಾರ್ಜ್ ಮಾಡಿದ್ದರು.

ಜನವರಿ 26 ರಂದು ನಡೆದ ಹಿಂಸಾಚಾರದಲ್ಲಿ ಒಬ್ಬ ರೈತರು ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.