ADVERTISEMENT

ಉಪಚುನಾವಣೆಯಲ್ಲಿ ಹಿನ್ನಡೆ: ಭಾನುವಾರ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2021, 8:56 IST
Last Updated 3 ನವೆಂಬರ್ 2021, 8:56 IST
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ,  ಪ್ರಧಾನಿ ನರೇಂದ್ರ ಮೋದಿ  ಕೇಂದ್ರ ಗೃಹ ಸಚಿವ ಅಮಿತ್ ಶಾ : ಪಿಟಿಐ ಚಿತ್ರ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ : ಪಿಟಿಐ ಚಿತ್ರ   

ನವದೆಹಲಿ: ಮುಂಬರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ಇತರ ಪ್ರಸ್ತುತ ವಿಷಯಗಳ ಕುರಿತು ಚರ್ಚಿಸಲು, ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿ (ಎನ್‌ಇಸಿ) ಸಭೆ ಭಾನುವಾರ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಲಿದ್ದಾರೆ.

2019ರ ಲೋಕಸಭಾ ಚುನಾವಣೆಯ ನಂತರ ಪಕ್ಷದ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಎನ್‌ಇಸಿಯ ಮೊದಲ ಸಭೆ ಇದಾಗಿದೆ. ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಉಪಚುನಾವಣೆಗಳಲ್ಲಿ ಪಕ್ಷಕ್ಕೆ ಹಿನ್ನಡೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಸಭೆಯ ಬಗ್ಗೆ ಎನ್‌ಇಸಿ ಸದಸ್ಯರಿಗೆ ಪತ್ರದಲ್ಲಿ ಮಾಹಿತಿ ನೀಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು, 'ಬಿಜೆಪಿಯ ಎನ್‌ಇಸಿ ಸಭೆಯನ್ನು ನವೆಂಬರ್ 7 ರಂದು ದೆಹಲಿಯಲ್ಲಿ ನಿಗದಿಪಡಿಸಲಾಗಿದೆ. ಸಭೆಯು ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 3 ಗಂಟೆಗೆ ಮುಕ್ತಾಯವಾಗಲಿದೆ. ಸಭೆಯ ಸ್ಥಳ ಎನ್‌ಡಿಎಂಸಿ ಕನ್ವೆಂಷನ್ ಸೆಂಟರ್ ಆಗಿದೆ. ಸಭೆಯು ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರ ಉದ್ಘಾಟನಾ ಭಾಷಣದೊಂದಿಗೆ ಪ್ರಾರಂಭವಾಗುತ್ತದೆ ಮತ್ತು ಪ್ರಧಾನಿ ಮೋದಿಯವರು ಭಾಷಣವನ್ನು ಮಾಡಲಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

ಸಭೆಯಲ್ಲಿ ‘ಅಧ್ಯಕ್ಷರ ಭಾಷಣ, ಸಂತಾಪ ಸೂಚಕ ನಿರ್ಣಯ, ಮುಂಬರುವ ವಿಧಾನಸಭಾ ಚುನಾವಣೆಗಳ ಚರ್ಚೆ ಮತ್ತು ಇತರ ಪ್ರಸ್ತುತ ಸಮಸ್ಯೆಗಳು ಹಾಗೂ ಅದರ ಬಗ್ಗೆ ನಿರ್ಣಯ ಮತ್ತು ಚರ್ಚೆ’ನಡೆಯಲಿದೆ ಎಂದು ಎನ್‌ಇಸಿ ಸಭೆಯ ಕಾರ್ಯಸೂಚಿಗೆ ಸಂಬಂಧಿಸಿದಂತೆ ಸಿಂಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.