ಚೆನ್ನೈ:ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾದ ಮರುದಿನವೇ ಡಿಎಂಕೆ ಶಾಸಕಕು.ಕ.ಸೆಲ್ವಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದ್ದು, ಪಕ್ಷದ ಹುದ್ದೆಗಳಿಂದ ಬಿಡುಗಡೆಗೊಳಿಸಲಾಗಿದೆ.
ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಏಕೆ ತೆಗೆಯಬಾರದು ಎಂಬುದಕ್ಕೆ ವಿವರಣೆ ನೀಡುವಂತೆ ಶಾಸಕರಿಗೆ ನೋಟಿಸ್ ಕಳುಹಿಸಲಾಗಿದೆ.
‘ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಜೊತೆಗೆ ಪಕ್ಷಕ್ಕೆ ಅಪಖ್ಯಾತಿ ಉಂಟುಮಾಡಿರುವುದರಿಂದ ಸೆಲ್ವಂ ಅವರನ್ನು ಅಮಾನತುಗೊಳಿಸಲಾಗಿದೆ. ಈ ಸಂಬಂಧ, ಅವರ ವಿವರಣೆಯನ್ನು ಕೇಳಲಾಗಿದೆ’ ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ತಿಳಿಸಿದ್ದಾರೆ.
ಕಳೆದ ಮಂಗಳವಾರ ದೆಹಲಿಗೆ ಭೇಟಿ ನೀಡಿದ್ದ ಶಾಸಕ ಸೆಲ್ವಂ, ಮೋದಿ ನೇತೃತ್ವದ ಆಡಳಿತಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಅಲ್ಲದೇ ರಾಮ ಮಂದಿರ ನಿರ್ಮಿಸುವ ಅವರ ಪ್ರಯತ್ನಗಳಿಗಾಗಿ ಶುಭಾಶಯ ಕೋರಿದ್ದರು. ಇದೇ ವೇಳೆ ಅವರು ನಡ್ಡಾ ಅವರನ್ನು ಭೇಟಿ ಮಾಡಿದ್ದರು.
ಬಿಜೆಪಿ ಪಕ್ಷಾಂತರಗೊಳ್ಳುವ ಉದ್ದೇಶದಿಂದದೆಹಲಿಗೆ ಭೇಟಿ ನೀಡಿರುವ ವದಂತಿಯನ್ನು ತಳ್ಳಿಹಾಕಿರುವ ಸೆಲ್ವಂ, ‘ಕ್ಷೇತ್ರದ ಯೋಜನೆಗಳ ಕುರಿತು ಚರ್ಚಿಸುವ ಸಲುವಾಗಿ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಲು ಹೋಗಿದ್ದೆ. ಇದೇ ವೇಳೆ ಜೆ.ಪಿ ನಡ್ಡಾ ಅವರನ್ನು ಭೇಟಿ ಆಗುವ ಅವಕಾಶ ದೊರೆಯಿತು ಎಂದು ಪ್ರತಿಕ್ರಿಯಿಸಿದ್ದಾರೆ.
ರಾಮೇಶ್ವರಂ ಸೇರಿದಂತೆ ರಾಮನಿಗೆ ಸಂಬಂಧಿಸಿದ ಕ್ಷೇತ್ರಗಳನ್ನುಅಯೋಧ್ಯೆಯ ಮಾದರಿಯಲ್ಲಿಯೇ ಅಭಿವೃದ್ಧಿ ಮಾಡುವಂತೆ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.