ADVERTISEMENT

7 ದಶಕಗಳ ಬಳಿಕ ಕಾಶ್ಮೀರಕ್ಕೆ ಸಾಮಾಜಿಕ ನ್ಯಾಯ ಒದಗಿಸಿದ ಮೋದಿ: ಗವರ್ನರ್ ಮೆಚ್ಚುಗೆ

ಪಿಟಿಐ
Published 18 ಫೆಬ್ರುವರಿ 2024, 10:58 IST
Last Updated 18 ಫೆಬ್ರುವರಿ 2024, 10:58 IST
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ
ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ   

ಶ್ರೀನಗರ: ದೇಶಕ್ಕೆ ಸ್ವಾತಂತ್ರ್ಯ ದೊರೆತ 70 ವರ್ಷಗಳ ನಂತರ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ನ್ಯಾಯವನ್ನು ಒದಗಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.

ತಮ್ಮ ಮಾಸಿಕ ‘ಆವಾಮ್‌ ಕಿ ಆವಾಜ್‌’ ರೇಡಿಯೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆತ್ಮನಿರ್ಭರ ಜಮ್ಮು ಮತ್ತು ಕಾಶ್ಮೀರವನ್ನು ರೂಪಿಸಲು ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಕೇಂದ್ರ ಸರ್ಕಾರದ ಶ್ರಮ ಶ್ಲಾಘನೀಯ ಎಂದು ಹೇಳಿದ್ದಾರೆ

‘ದೇಶಕ್ಕೆ ಸ್ವಾತಂತ್ರ್ಯ ದೊರೆತ 70 ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಸಾಮಾಜಿಕ ನ್ಯಾಯ ಒದಗಿಸಿದ್ದಾರೆ. ಇದರಿಂದಾಗಿ ಎಲ್ಲರಿಗೂ ಸಮಾನ ಅವಕಾಶಗಳು ಮತ್ತು ಸಂಪನ್ಮೂಲಗಳು ಲಭಿಸಿದೆ. ಇದು ಸಮಾಜದ ಅಂಚಿನಲ್ಲಿರುವ ವರ್ಗಗಳ ಯೋಗಕ್ಷೇಮ ಹಾಗೂ ಸಮೃದ್ಧಿಯನ್ನು ಹೆಚ್ಚಿಸಿದೆ’ ಎಂದು ಅವರು ಹೇಳಿದ್ದಾರೆ.

ADVERTISEMENT

ಎಲ್ಲರ ಬೆಂಬಲ, ಎಲ್ಲರ ಅಭಿವೃದ್ಧಿ, ಎಲ್ಲರ ನಂಬಿಕೆ ಮತ್ತು ಎಲ್ಲರ ಪ್ರಯತ್ನ (ಸಬ್‌ಕಾ ಸಾಥ್‌, ಸಬ್‌ಕಾ ವಿಕಾಸ್‌, ಸಬ್‌ಕಾ ವಿಶ್ವಾಸ್ ಮತ್ತು ಸಬ್‌ಕಾ ಪ್ರಯಾಸ್) ಎಂಬ ಕನಸು ಅಭಿವೃದ್ಧಿ ಅಸಮತೋಲನವನ್ನು ಹೋಗಲಾಡಿಸಿದೆ ಎಂದು ಸಿನ್ಹಾ ತಿಳಿಸಿದ್ದಾರೆ.

‘ಜನಕೇಂದ್ರಿತ ಆಡಳಿತವಿಲ್ಲದೆ ಯಾವುದೇ ಭವಿಷ್ಯ ಆಧಾರಿತ ಸಮಾಜವು ಪ್ರಗತಿ ಹೊಂದಲು ಸಾಧ್ಯವಿಲ್ಲ. ಆದ್ದರಿಂದ ಬೆಳವಣಿಗೆಯು ಸಮಾಜದ ಎಲ್ಲಾ ವರ್ಗಗಳನ್ನು ತಲುಪಬೇಕು ಮತ್ತು ಸಮಾನ ಅವಕಾಶಗಳು ದೊರೆಯುವಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದು ನಮ್ಮ ಆಶಯವಾಗಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.