ಪಣಜಿ: ಗೋವಾದಲ್ಲಿ ಮುಂದಿನ ಆರು ತಿಂಗಳಲ್ಲಿ ಗಣಿಗಾರಿಕೆ ಆರಂಭವಾಗಲಿದೆ ಎಂಬ ಸುಳಿವನ್ನು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ನೀಡಿದ್ದಾರೆ.
ರಾಜ್ಯದಲ್ಲಿನ 88 ಕಬ್ಬಿಣದ ಅದಿರು ಗಣಿಗಳ ಗುತ್ತಿಗೆ ನವೀಕರಣ ಸಂಬಂಧ ಸಲ್ಲಿಸಲಾಗಿದ್ದ ಎರಡನೇ ಅರ್ಜಿಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ನಂತರ ಐದು ದಶಕಗಳಿಂದ ನಡೆಯುತ್ತಿದ್ದ ಗಣಿಗಾರಿಕೆ ಕಳೆದ ವರ್ಷದ ಮಾರ್ಚ್ನಲ್ಲಿ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಇದರಿಂದಾಗಿ ಕರಾವಳಿ ರಾಜ್ಯದಲ್ಲಿ ಯಾವುದೇ ಗಣಿಗಾರಿಕೆಗೆ ಅವಕಾಶ ಸಿಕ್ಕಿರಲಿಲ್ಲ.
ಸೇಸಾ ಫುಟ್ಬಾಲ್ ಅಕಾಡೆಮಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಾವಂತ್, ‘ರಾಜ್ಯದಲ್ಲಿ ಮತ್ತೊಮ್ಮೆ ಗಣಿಗಾರಿಕೆ ಆರಂಭವಾಗಲಿದೆ ಎಂಬ ಬಗ್ಗೆ ಸರ್ಕಾರ ಖಾತರಿ ಹೊಂದಿದೆ’ ಎಂದು ಹೇಳಿದರು.
‘ಗೋವಾದಲ್ಲಿ ಗಣಿಗಾರಿಕೆಪುನರಾರಂಭಕ್ಕೆ ನಾವು ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇವೆ. ನಾನು ಮುಖ್ಯಮಂತ್ರಿಯಾದ ನಂತರ ಸಾಕಷ್ಟು ಬದಲಾವಣೆ ಆಗುತ್ತಿದೆ. ಮುಂದಿನ ಆರು ತಿಂಗಳಲ್ಲಿ ಗಣಿಗಾರಿಕೆ ಸಂಬಂಧವೂ ಸಕಾರಾತ್ಮಕ ಬೆಳವಣಿಗೆ ಆಗಲಿದೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.