ನವದೆಹಲಿ: ‘ಅಗ್ನಿಪಥ’ ಯೋಜನೆ ವಿರೋಧಿಸಿ ದೇಶದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಸೋಮವಾರವೂ ಮುಂದುವರಿದಿವೆ.
ಜಾರ್ಖಂಡ್ನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 9ರಿಂದ 11 ನೇ ತರಗತಿವರೆಗಿನ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಕೆಲವು ಸಂಘಟನೆಗಳು ಭಾರತ ಬಂದ್ಗೆ ಕರೆ ನೀಡಿರುವುದರಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಜಾರ್ಖಂಡ್ ಶಾಲಾ ಶಿಕ್ಷಣ ಕಾರ್ಯದರ್ಶಿ ರಾಜೇಶ್ ಕುಮಾರ್ ಶರ್ಮಾ ತಿಳಿಸಿದ್ದಾರೆ.
ಭಾರತ ಬಂದ್ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಹಿಂಸಾಕೃತ್ಯಗಳಲ್ಲಿ ಯಾರೇ ತೊಡಗಿಕೊಂರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಭದ್ರತಾ ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಪ್ರಸಂಗ ಬಂದರೆ ‘ಅಗ್ನಿವೀರ’ರಿಗೆ ಆದ್ಯತೆ ನೀಡುತ್ತೇನೆ ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೇಳಿಕೆಗೆ ತೃಣಮೂಲ ಕಾಂಗ್ರೆಸ್ ಮತ್ತು ಸಿಪಿಐಎಂ ತೀವ್ರ ವಿರೋಧ ವ್ಯಕ್ತಪಡಿಸಿವೆ. ಈ ರೀತಿಯ ಹೇಳಿಕೆ ನೀಡುವ ಮೂಲಕ ಬಿಜೆಪಿ ನಾಯಕರು ದೇಶದ ಸೈನಿಕರ ಶೌರ್ಯವನ್ನು ಅವಮಾನಿಸಿದ್ದಾರೆ ಎಂದು ಉಭಯ ಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.
ಕೇಂದ್ರ ಸರ್ಕಾರಿ ಕಚೇರಿಗಳು, ಸೇನಾ ನೇಮಕಾತಿ ಕೇಂದ್ರಗಳು, ಬಿಜೆಪಿ ಮತ್ತು ಹಿಂದೂ ನಾಯಕರಿಗೆ ಸಂಬಂಧಿಸಿದ ಕಚೇರಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಪಂಜಾಬ್ ಸರ್ಕಾರವು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಪ್ರಮುಖ ಕಚೇರಿಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಸದ್ಯ, 20 ಜಿಲ್ಲೆಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.