ADVERTISEMENT

ಅಗ್ನಿಪಥ ವಿರುದ್ಧ ದೇಶದ ವಿವಿಧೆಡೆ ಕಾಂಗ್ರೆಸ್‌ ಪ್ರತಿಭಟನೆ

ಪಿಟಿಐ
Published 27 ಜೂನ್ 2022, 15:15 IST
Last Updated 27 ಜೂನ್ 2022, 15:15 IST
ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು
ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಯುವ ಕಾಂಗ್ರೆಸ್‌ ಕಾರ್ಯಕರ್ತರು   

ಜಮ್ಮು/ಇಟಾನಗರ/ಗುವಾಹಟಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಅಗ್ನಿಪಥ’ ಯೋಜನೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷವು ದೇಶದಾದ್ಯಂತ ಸೋಮವಾರ ಪ್ರತಿಭಟನೆ ನಡೆಸಿತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ಸತ್ಯಾಗ್ರಹ ಹಮ್ಮಿಕೊಂಡ ಕಾಂಗ್ರೆಸ್ ಘಟಕವು, ಯುವಕ ಭವಿಷ್ಯದ ಜೊತೆಗಿನ ಚೆಲ್ಲಾಟದ ಅಗ್ನಿಪಥ ಯೋಜನೆಯನ್ನು ಕೇಂದ್ರ ಸರ್ಕಾರ ತಕ್ಷಣವೇ ಹಿಂಪಡೆಯಬೇಕು ಎಂದು ಒತ್ತಾಯಿಸಿತು. ಅಸ್ಸಾಂ, ಅರುಣಾಚಲ ಪ್ರದೇಶ, ಮಹಾರಾಷ್ಟ್ರದ ನಾಗ್ಪುರ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಪಟ್ನಾ ವರದಿ: ‘ಅಗ್ನಿಪಥ’ ವಿಚಾರವು ಬಿಹಾರದಲ್ಲಿ ಆರಂಭವಾಗಿರುವ ವಿಧಾನಮಂಡಲದ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತು.

ADVERTISEMENT

ಬಿಹಾರದ ಮುಂಗಾರು ಅಧಿವೇಶನದ 2ನೇ ದಿನದ ಕಲಾಪ ಸೋಮವಾರ ಬೆಳಿಗ್ಗೆ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳು, ಅಗ್ನಿಪಥ ಯೋಜನೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದವು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಘೋಷಣೆಗಳನ್ನು ಮೊಳಗಿಸಿದವು.

ಈ ಹಿನ್ನೆಲೆಯಲ್ಲಿ ಕಲಾಪ ಆರಂಭವಾದ ಅರ್ಧ ಗಂಟೆಯಲ್ಲೇ ಅಂದರೆ, 11 ಗಂಟೆಗೆ ಕಲಾಪವನ್ನು ಮುಂದೂಡಲಾಯಿತು. ಊಟದ ವಿರಾಮದ ನಂತರ 2 ಗಂಟೆಗೆ ಕಲಾಪ ಮತ್ತೆ ಆರಂಭವಾಯಿತು. ಆದರೆ, ಕಲಾಪವನ್ನು ಮತ್ತೆ ಮುಂದೂಡಿ ಸರ್ವಪಕ್ಷಗಳ ಸದಸ್ಯರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಅವರು ಆರ್‌ಜೆಡಿ ನೇತೃತ್ವದ ಪ್ರತಿಪಕ್ಷಗಳ ಮನವೊಲಿಕೆಗೆ ಯತ್ನಿಸಿದರು. ಆದರೆ, ಅದೂ ಫಲ ಕೊಡಲಿಲ್ಲ. ಹೀಗಾಗಿ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.