ಮೃತದೇಹಗಳ ಹಸ್ತಾಂತರ ಪ್ರಕ್ರಿಯೆ
-ಪಿಟಿಐ ಚಿತ್ರ
ನವದೆಹಲಿ: ಗುಜರಾತ್ನ ಅಹಮದಾಬಾದ್ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 270 ಜನರು ಮೃತಪಟ್ಟ ಐದು ದಿನಗಳ ನಂತರ, ಡಿಎನ್ಎ ಹೊಂದಾಣಿಕೆಯ ಮೂಲಕ ಇದುವರೆಗೆ 135 ಮೃತದೇಹಗಳನ್ನು ಗುರುತಿಸಲಾಗಿದೆ ಮತ್ತು 101 ಶವಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಹುತೇಕ ಮೃತದೇಹಗಳು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ ಅಥವಾ ಛಿದ್ರವಾಗಿವೆ. ಆದ್ದರಿಂದ ಅಧಿಕಾರಿಗಳು ಡಿಎನ್ಎ ಪರೀಕ್ಷೆ ನಡೆಸಿ ಮೃತರ ಗುರುತು ಪತ್ತೆ ಮಾಡುತ್ತಿದ್ದಾರೆ. ಈ ಪ್ರಕ್ರಿಯೆಗಾಗಿ 230 ತಂಡಗಳನ್ನು ರಚಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ರಾಕೇಶ್ ಜೋಶಿ ತಿಳಿಸಿದ್ದಾರೆ.
ಈವರೆಗೆ ಗುರುತು ಪತ್ತೆ ಮಾಡಲಾದ ಸಂತ್ರಸ್ತರು ಗುಜರಾತ್, ಮಹಾರಾಷ್ಟ್ರ, ಬಿಹಾರ, ರಾಜಸ್ಥಾನ ಮತ್ತು ದಿಯು ಮತ್ತು ದಮನ್ನ ವಿವಿಧ ಪ್ರದೇಶದವರು ಎಂದು ಅವರು ಹೇಳಿದ್ದಾರೆ.
ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ವೇಳೆಗೆ ಎಲ್ಲಾ ಸಂತ್ರಸ್ತರ ಡಿಎನ್ಎ ಪರೀಕ್ಷೆ ಪೂರ್ಣಗೊಳ್ಳಲಿದೆ ಎಂದು ಜೋಶಿ ತಿಳಿಸಿದ್ದಾರೆ.
ಜೂನ್ 12ರಂದು (ಗುರುವಾರ) ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡು, ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಕನಿಷ್ಠ 270 ಮಂದಿ ಮೃತಪಟ್ಟಿದ್ದರು.
ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿದ್ದ 242 ಮಂದಿಯ ಪೈಕಿ 241 ಮಂದಿ ಮೃತಪಟ್ಟಿದ್ದಾರೆ. ವಿಮಾನ ಡಿಕ್ಕಿ ಹೊಡೆದ ಸ್ಥಳದಲ್ಲಿದ್ದ ಎಂಬಿಬಿಎಸ್ ವಿದ್ಯಾರ್ಥಿಗಳೂ ಸೇರಿ 29 ಮಂದಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.