ಎಐ ಚಿತ್ರ
ನಾಗ್ಪುರ: ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಅಪಘಾತದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಎಐ (ಕೃತಕ ಬುದ್ಧಿಮತ್ತೆ) ಬಳಸಿಕೊಂಡು ನಾಗ್ಪುರ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ಪತ್ನಿಯ ಮೃತದೇಹ ಸಾಗಿಸಲು ಯಾರಿಂದಲೂ ಸಹಾಯ ಸಿಗದ ಕಾರಣ, ದೇಹವನ್ನು ಬೈಕ್ಗೆ ಕಟ್ಟಿ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಕಳೆದ ವಾರ ನಡೆದಿತ್ತು.
ಆಗಸ್ಟ್ 9 ರಂದು ನಾಗ್ಪುರ–ಜಬಲ್ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಬೈಕ್ಗೆ ದೇಹವನ್ನು ಕಟ್ಟಿ ಸಾಗಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದರ ಬೆನ್ನಲ್ಲೇ ನಾಗ್ಪುರ ಪೊಲೀಸರು ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಆರಂಭದಲ್ಲಿ ಪೊಲೀಸರಿಗೆ ಟ್ರಕ್ ಚಾಲಕನ ಬಗ್ಗೆ ಯಾವುದೇ ಸುಳಿವು ಸಿಗಲಿಲ್ಲ. ಆದರೆ ಅಪರಾಧ ತಡೆಗಟ್ಟುವಿಕೆ ಹಾಗೂ ಪೊಲೀಸರ ತನಿಖೆಗೆ ಸಹಾಯ ಮಾಡುವ ಉದ್ದೇಶದಿಂದ ವಿನ್ಯಾಸಗೊಳಿಸಲಾದ AI -MARVEL (ಮಹಾರಾಷ್ಟ್ರ ಅಡ್ವಾನ್ಸ್ಡ್ ರಿಸರ್ಚ್ ಅಂಡ್ ವಿಜಿಲೆನ್ಸ್ ಫಾರ್ ಎನ್ಹ್ಯಾನ್ಸ್ಡ್ ಲಾ ಎನ್ಫೋರ್ಸ್ಮೆಂಟ್) ಬಳಸಿಕೊಂಡು ವಿವಿಧ ಸಿಸಿಟಿವಿ ಕ್ಯಾಮೆರಾಗಳಿಂದ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡುವ ಮೂಲಕ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಚಾಲಕನನ್ನು ಉತ್ತರ ಪ್ರದೇಶದ ಫರೂಕಾಬಾದ್ ನಿವಾಸಿ ಸತ್ಯಪಾಲ್ ರಾಜೇಂದ್ರ (28) ಎಂದು ಗುರುತಿಸಲಾಗಿದ್ದು, ಟ್ರಕ್ ಅನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ವಿವರ
ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಅಮಿತ್ ಯಾದವ್, ತಮ್ಮ ಪತ್ನಿ ಗ್ಯಾರ್ಸಿಯವರೊಂದಿಗೆ ನಾಗ್ಪುರದ ಲೊನಾರಾದಿಂದ ಮಧ್ಯಪ್ರದೇಶದ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟ್ರಕ್ ಅವರ ಬೈಕ್ಗೆ ಡಿಕ್ಕಿ ಹೊಡೆದಿತ್ತು. ರಸ್ತೆಗೆ ಬಿದ್ದ ಗ್ಯಾರ್ಸಿಯ ಮೇಲೆ ಟ್ರಕ್ ಹರಿದಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದರು.
ಘಟನೆ ಬಳಿಕ ಸಹಾಯಕ್ಕೆಂದು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ನಿಲ್ಲಿಸಲು ಯಾದವ್ ಪ್ರಯತ್ನಿಸಿದ್ದಾರೆ. ಆದರೆ ಯಾರೊಬ್ಬರೂ ಸಹಾಯಕ್ಕೆ ಬರದೇ ಇದ್ದಾಗ, ವಿಧಿಯಿಲ್ಲದೆ ಮೃತದೇಹವನ್ನು ತಮ್ಮ ಬೈಕ್ಗೆ ಕಟ್ಟಿ ಊರಿನತ್ತ ಹೊರಟಿದ್ದಾರೆ ಎಂದು ಪೊಲೀಸರು ಹೇಳಿದ್ದರು.
ಬೈಕ್ ಅನ್ನು ತಡೆದು ನಿಲ್ಲಿಸಿದ ಪೊಲೀಸರು ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಾಗ್ಪುರದ ಇಂದಿರಾ ಗಾಂಧಿ ಮೆಡಿಕಲ್ ಕಾಲೇಜಿಗೆ ರವಾನಿಸಿದ್ದರು.
ಹೆಂಡತಿಯ ಮೃತದೇಹವನ್ನು ಬೈಕಿನ ಹಿಂಬದಿಯ ಸೀಟಿಗೆ ಕಟ್ಟಿ ಹಾಕಿ, ಸಾಗಿಸುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.