
ರಾಹುಲ್ ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದರು
ಮುಂಬೈ: ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಎ.ಐ ಶೃಂಗಸಭೆಯ ‘ಎಕ್ಸ್ಪೋ’ ನಡೆಯುತ್ತಿರುವ ಹಾಲ್ನಲ್ಲಿ ನಡೆಸಿದ ಪ್ರತಿಭಟನೆಗೆ ಪ್ರತೀಕಾರವಾಗಿ ಬಿಜೆಪಿ ಕಾರ್ಯಕರ್ತರು ಶನಿವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದಾರೆ.
ರಾಹುಲ್ ಗಾಂಧಿ ಅವರು ಮಾನನಷ್ಟ ಪ್ರಕರಣ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಾಂಡಿಗೆ ರಸ್ತೆ ಮೂಲಕ ಪ್ರಯಾಣಿಸುತ್ತಿದ್ದರು. ಮುಲುಂಡ್ ಟೋಲ್ ಪ್ಲಾಜಾ ಬಳಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿ ರಾಹುಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
‘ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳನ್ನು ನಿರಂತರವಾಗಿ ವಿರೋಧಿಸುವ ಮೂಲಕ ದೇಶದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ. ಯುವ ಕಾಂಗ್ರೆಸ್ ಕಾರ್ಯಕರ್ತರು ಎ.ಐ ಶೃಂಗಸಭೆಯಲ್ಲಿ ಭಾರತದ ಪ್ರತಿಷ್ಠೆಗೆ ಧಕ್ಕೆ ತರುವ ಘೋಷಣೆಗಳನ್ನು ಕೂಗಿದ್ದಾರೆ. ಅದಕ್ಕಾಗಿಯೇ ನಾವು, ರಾಹುಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದೇವೆ’ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ.
ಏತನ್ಮಧ್ಯೆ, ಕಾಂಗ್ರೆಸ್ ನಾಯಕ ಸಚಿನ್ ಸಾವಂತ್ ಮಾತನಾಡಿ, ‘ಬಿಜೆಪಿ ನಾಯಕರು ಪ್ರತಿಭಟನೆ ನಡೆಸುವ ಮೂಲಕ ‘ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಮಾತನಾಡುವ ಬದಲು ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನಿಸುತ್ತಿದ್ದಾರೆ’ ಎಂದು ಕಿಡಿಕಾರಿದ್ದಾರೆ.
ಯುವ ಕಾಂಗ್ರೆಸ್ ಕಾರ್ಯಕರ್ತರ ಗುಂಪೊಂದು ಎ.ಐ ಶೃಂಗಸಭೆಯ ‘ಎಕ್ಸ್ಪೋ’ ನಡೆಯುತ್ತಿರುವ ಹಾಲ್ನಲ್ಲಿ ಶುಕ್ರವಾರ ಕೆಲಹೊತ್ತು ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗಿತ್ತು.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಅವರು ಪ್ರತಿಭಟನೆಯನ್ನು ‘ದೇಶ ವಿರೋಧಿ’ ಎಂದು ಟೀಕಿಸಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರು ‘ರಾಹುಲ್ ಗಾಂಧಿ ಸೈನಿಕರ’ ಪ್ರತಿಭಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರಧಾನಿ ‘ರಾಜಿ’ ಆಗಿರುವಾಗ ನಮಗೆ ಮೌನವಾಗಿರಲು ಸಾಧ್ಯವಿಲ್ಲ ಎಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.