
ಯುವ ಕಾಂಗ್ರೆಸ್ ಪ್ರತಿಭಟನೆ
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎ.ಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತನನ್ನು (ಐವೈಸಿ) ಇಂದು ಗ್ವಾಲಿಯರ್ನಲ್ಲಿ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಆರೋಪಿ ಜಿತೇಂದ್ರ ಯಾದವ್ ಎಂಬಾತನನ್ನು ಬಂಧಿಸಲಾಗಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಶುಕ್ರವಾರ ಭಾರತ ಮಂಟಪದಲ್ಲಿ ಎ.ಐ ಇಂಪ್ಯಾಕ್ಟ್ ಶೃಂಗದ ಸಂದರ್ಭದಲ್ಲಿ ಐವೈಸಿ ಕಾರ್ಯಕರ್ತರ ಗುಂಪು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದರು. ಅವರು ಭಾರತ ಹಾಗೂ ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್ಗಳನ್ನು ಧರಿಸಿದ್ದರು.
ಈ ಘಟನೆಯು ಆಡಳಿತಾರೂಢ ಬಿಜೆಪಿ ಹಾಗೂ ವಿಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಯಿತು.
ದೆಹಲಿಯ ನ್ಯಾಯಾಲಯವು ಇದು ಸಾರ್ವಜನಿಕ ವ್ಯವಸ್ಥೆ ಮೇಲಿನ ಸ್ಪಷ್ಟ ದಾಳಿಯಾಗಿದೆ ಎಂದು ಅಭಿಪ್ರಾಯಪಟ್ಟಿತ್ತು. ಐವೈಸಿ ಕಾರ್ಯಕರ್ತರ ನಡವಳಿಕೆಯಿಂದ ದೇಶದ ರಾಜತಾಂತ್ರಿಕತೆಯ ಪ್ರತಿಷ್ಠೆಗೂ ಧಕ್ಕೆಯಾಗಿದೆ ಎಂದು ಅದು ಹೇಳಿತ್ತು.
ಕಾಂಗ್ರೆಸ್ ಪಕ್ಷವು ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು 'ಕೊಳಕು ಮತ್ತು ನಾಚಿಕೆಗೇಡಿನ' ರಾಜಕೀಯ ಅಖಾಡವಾಗಿ ಬಳಸಿಕೊಂಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.