
ನವದೆಹಲಿ: ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರು ಕೃತಕ ಬುದ್ಧಿಮತ್ತೆಯ (ಎಐ) ಅಪಾಯವನ್ನು ಸೋಮವಾರ ಎತ್ತಿತೋರಿಸಿದ್ದಾರೆ. ತಮ್ಮ ನ್ಯಾಯಾಲಯದ ಕೋಣೆಯಲ್ಲಿ ಶೂ ಎಸೆಯಲು ಯತ್ನಿಸಿದ ಘಟನೆಯನ್ನು ತಪ್ಪಾಗಿ ಬಿಂಬಿಸಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ತಿರುಚಿದ ವಿಡಿಯೊ ಬಗ್ಗೆ ತಮಗೆ ತಿಳಿದಿದೆ ಎಂದು ಅವರು ತಿಳಿಸಿದ್ದಾರೆ.
ನ್ಯಾಯಾಂಗದಲ್ಲಿ ಎಐ ಬಳಕೆಯನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಎರಡು ವಾರಗಳ ನಂತರ ವಿಚಾರಣೆಗೆ ಪಟ್ಟಿ ಮಾಡಿದ ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠವು, ನಂತರ ಈ ಹೇಳಿಕೆಯನ್ನು ನೀಡಿತು.
ವಿಚಾರಣೆ ಸಮಯದಲ್ಲಿ, ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಪ್ರಕ್ರಿಯೆಯಲ್ಲಿ ಎಐಯನ್ನು ಅನಿಯಂತ್ರಿತವಾಗಿ ಅವಳಡಿಸಿಕೊಳ್ಳುವುದರ ವಿರುದ್ಧ ಎಚ್ಚರಿಸುತ್ತಾ, ‘ಈ ನ್ಯಾಯಾಲಯ ಕೂಡ ಎಐ ಬಳಸುತ್ತಿದೆ’ ಎಂದಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, ‘ನಮಗೆ ಅದರ ಅರಿವಿದೆ, ನಮ್ಮಿಬ್ಬರ ತಿರುಚಿದ ವಿಡಿಯೊವನ್ನು ನಾವು ನೋಡಿದ್ದೇವೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ನಕಲಿ ವಿಡಿಯೊವನ್ನು ಉಲ್ಲೇಖಿಸುತ್ತಾ ಹೇಳಿದ್ದಾರೆ.