
ಉದಯ್ ಭಾನು
ನವದೆಹಲಿ: ಇತ್ತೀಚೆಗೆ ಮುಕ್ತಾಯವಾದ ಎ.ಐ ಶೃಂಗಸಭೆಯ ‘ಎಕ್ಸ್ಪೋ’ ನಡೆಯುತ್ತಿದ್ದ ಸಭಾಂಗಣದಲ್ಲಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಉದಯ್ ಭಾನು ಚಿಬ್ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ.
ಕಸ್ಟಡಿ ಅವಧಿಯನ್ನು ಮತ್ತೆ 7 ದಿನ ವಿಸ್ತರಿಸುವಂತೆ ಕೋರಿ ದೆಹಲಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶೆ ವಂಶಿಕಾ ಮೆಹ್ತಾ, ಅರ್ಜಿಯನ್ನು ವಜಾಗೊಳಿಸಿ, ಜಾಮೀನು ಮಂಜೂರು ಮಾಡಿದ್ದಾರೆ
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಬ್ ಪರ ವಕೀಲರು, ನ್ಯಾಯಾಲಯವು ₹50,000 ಶ್ಯೂರಿಟಿ ಬಾಂಡ್ ಮೇಲೆ ಜಾಮೀನು ನೀಡಿದ್ದು, ಚಿಬ್ ಅವರ ಪಾಸ್ಪೋರ್ಟ್ ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ಒಪ್ಪಿಸುವಂತೆ ನಿರ್ದೇಶಿಸಿದೆ.
ಫೆಬ್ರುವರಿ 20ರಂದು ಮಧ್ಯಾಹ್ನ 12.30ರ ಸುಮಾರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಎ.ಐ ಶೃಂಗಸಭೆ ನಡೆಯುತ್ತಿದ್ದ ‘ಭಾರತ ಮಂಟಪ’ದ ಸಭಾಂಗಣ ಸಂಖ್ಯೆ 5ರ ಒಳಗೆ ಏಕಾಏಕಿ ಪ್ರವೇಶಿಸಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ಮೋದಿ ಮತ್ತು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಚಿತ್ರಗಳಿರುವ ಟಿ-ಶರ್ಟ್ಗಳನ್ನು ಅವರು ಪ್ರದರ್ಶಿಸಿದರು. ಟಿ–ಶರ್ಟ್ ಮೇಲೆ ‘ಭಾರತ– ಅಮೆರಿಕ ವ್ಯಾಪಾರ ಒಪ್ಪಂದ’, ‘ಎಪ್ಸ್ಟೈನ್ ಫೈಲ್ಸ್’ ಮತ್ತು ‘ಪ್ರಧಾನಿ ರಾಜಿಯಾಗಿದ್ದಾರೆ’ ಎಂದು ಬರೆಯಲಾಗಿತ್ತು.
ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.