ನವದೆಹಲಿ: ದಕ್ಷಿಣ ದೆಹಲಿಯ ಗೌತಮ್ ನಗರದಲ್ಲಿ ನಡೆದ ಹೊಡೆದಾಟದಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯ ಇಬ್ಬರು ವೈದ್ಯರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಬುಧವಾರ ಗೌತಮ್ ನಗರದಲ್ಲಿ ಘಟನೆ ನಡೆದಿದ್ದು, ಭಗತ್ ಸಿಂಗ್ ವರ್ಮಾ ಎಂಬವರ ಅಂಗಡಿಗೆ ತೆರಳಿದ್ದ ಏಮ್ಸ್ನ ವೈದ್ಯರು ಅಲ್ಲಿ ಮದ್ಯ ಸೇವಿಸಿದ್ದರು ಎಂದು ಆಪಾದಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವೈದ್ಯರು ಹಾಗೂ ಅಂಗಡಿಯವರ ನಡುವೆ ತೀವ್ರ ವಾಗ್ವಾದ ನಡೆಯಿತು. ಬಳಿಕ ಎರಡೂ ಕಡೆಯವರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಆಯುಕ್ತ (ದಕ್ಷಿಣ) ಅತುಲ್ ಕುಮಾರ್ ಹೇಳಿದ್ದಾರೆ.
ಘಟನೆಯಲ್ಲಿ ಏಮ್ಸ್ನ ಇಬ್ಬರು ವೈದ್ಯರು ಮತ್ತು ಅಂಗಡಿ ಮಾಲೀಕ ಭಗತ್ ಸಿಂಗ್ ವರ್ಮಾ ಮತ್ತು ಪುತ್ರ ಅಭಿಷೇಕ್ ಗಾಯಗೊಂಡಿದ್ದಾರೆ. ಎರಡೂ ಕಡೆಯವರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಕಾನೂನಿಗೆ ತಕ್ಕಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.