
ಏರ್ ಆಂಬುಲೆನ್ಸ್ ದುರಂತದಲ್ಲಿ ಮೃತಪಟ್ಟವರ ಮೃತದೇಹಗಳನ್ನು ನೋಡುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು
–ಪಿಟಿಐ ಚಿತ್ರ
ರಾಂಚಿ: ಏರ್ ಆಂಬುಲೆನ್ಸ್ ದುರಂತದಲ್ಲಿ ಮೃತಪಟ್ಟ ಏಳು ಮಂದಿಯ ಮೃತದೇಹಗಳನ್ನು ಮಂಗಳವಾರ ಅವರವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
‘ರಾಂಚಿ– ದೆಹಲಿ ವಲಯದಲ್ಲಿ ಏರ್ ಆಂಬುಲೆನ್ಸ್ ಆಗಿ ಕಾರ್ಯಾಚರಿಸುತ್ತಿದ್ದ ರೆಡ್ಬರ್ಡ್ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ‘ಬೀಚ್ಕ್ರಾಫ್ಟ್ ಸಿ90’ ವಿಮಾನವು ಜಾರ್ಖಂಡ್ನ ಚತ್ರಾ ಜಿಲ್ಲೆಯ ಸಿಮಾರಿಯಾ ಬಳಿ ಸೋಮವಾರ ಸಂಜೆ ಪತನಗೊಂಡಿತ್ತು. ಘಟನೆಯಲ್ಲಿ ಇಬ್ಬರು ಪೈಲಟ್ಗಳು ಸೇರಿದಂತೆ ವಿಮಾನದ ಒಳಗಿದ್ದ ಎಲ್ಲಾ ಏಳು ಮಂದಿಯೂ ಮೃತಪಟ್ಟಿದ್ದರು.
ಚತ್ರಾದಲ್ಲಿನ ಸದರ್ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹಗಳನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಯಿತು ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಂಚಿ ವಿಮಾನ ನಿಲ್ದಾಣದಿಂದ ಸೋಮವಾರ ಸಂಜೆ 7.11ಕ್ಕೆ ವಿಮಾನ ಟೇಕ್ ಆಫ್ ಆಗಿದ್ದು, 20 ನಿಮಿಷಗಳ ಬಳಿಕ ಅಂದರೆ 7.30ರ ವೇಳೆಗೆ ಏರ್ ಟ್ರಾಫಿಕ್ ಕಂಟ್ರೋಲರ್ ಜತೆಗಿನ ಸಂಪರ್ಕ ಕಳೆದುಕೊಂಡಿದೆ. ಪ್ರತಿಕೂಲ ಹವಾಮಾನದಿಂದ ವಿಮಾನ ಪತನಗೊಂಡಿರಬಹುದು. ವಿವರವಾದ ತನಿಖೆಯ ಬಳಿಕ ಪತನದ ನಿಖರ ಕಾರಣ ತಿಳಿಯಲಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ಹೇಳಿದ್ಧಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.