ಬೆಂಗಳೂರು: ನ್ಯೂಯಾರ್ಕ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ಮಾಡಿದ ಪ್ರಕರಣದ ಆರೋಪಿ ಶಂಕರ್ ಮಿಶ್ರಾ ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದ ಎಂದು ದೆಹಲಿ ಪೊಲೀಸರ ಮೂಲವನ್ನು ಉಲ್ಲೇಖಿಸಿ ಎನ್ಡಿಟಿವಿ ವರದಿ ಮಾಡಿದೆ.
2022ರ ನವೆಂಬರ್ ತಿಂಗಳಿನಲ್ಲಿ, ಕುಡಿದ ಮತ್ತಿನಲ್ಲಿ ಸಹ ಮಹಿಳಾ ಯಾತ್ರಿಯ ಮೇಲೆ ಶಂಕರ್ ಮಿಶ್ರಾ ಮೂತ್ರ ವಿಸರ್ಜನೆ ಮಾಡಿದ್ದ. ಈ ಘಟನೆ ಇತ್ತೀಚೆಗಷ್ಟೇ ಬೆಳಕಿಗೆ ಬಂದಿತ್ತು. ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತಲ್ಲದೇ, ಆರೋಪಿಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದ ಏರ್ ಇಂಡಿಯಾ ವಿಮಾನ ಸಂಸ್ಥೆಯ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದರು.
ಸದ್ಯ ಪ್ರಕರಣದ ತನಿಖೆಗೆ ಹಾಗೂ ತಲೆಮರೆಸಿಕೊಂಡಿರುವ ಆರೋಪಿ ಶಂಕರ್ ಮಿಶ್ರಾ ಪತ್ತೆಗೆ ದೆಹಲಿ ಪೊಲೀಸರು 2 ತಂಡಗಳನ್ನು ರಚನೆ ಮಾಡಿದ್ದಾರೆ.
ಕೆಲ ದಿನಗಳ ಕಾಲ ಮಿಶ್ರಾ, ಬೆಂಗಳೂರಿನಲ್ಲಿರುವ ತನ್ನ ಸಹೋದರಿಯ ಮನೆಯಲ್ಲಿ ಇದ್ದ. ಈ ಬಗ್ಗೆ ಸಹೋದರಿಯನ್ನು ತನಿಖೆಗೆ ಒಳಪಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೆಹಲಿ ಪೊಲೀಸರ ಒಂದು ತಂಡ ಬೆಂಗಳೂರಿನಲ್ಲಿ ಹಾಗೂ ಇನ್ನೊಂದು ತಂಡ ಮಿಶ್ರಾ ತಂದೆ ವಾಸವಿರುವ ಮುಂಬೈನಲ್ಲಿ ಬೀಡುಬಿಟ್ಟಿದೆ.
ಇನ್ನು ಮಿಶ್ರಾ ವಿದೇಶಕ್ಕೆ ಪರಾರಿಯಾಗದಂತೆ ಲುಕ್ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಆತ ಇರುವ ಸ್ಥಳವನ್ನು ಪತ್ತೆ ಮಾಡುವ ಪ್ರಯತ್ನ ನಡೆಯುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.