
ವಿದಿತ್ ಎಸ್.ಗುಜರಾತಿ
ಪ್ರಜಾವಾಣಿ ಚಿತ್ರ
ನವದೆಹಲಿ: ಭಾರತದ ಚೆಸ್ ಗ್ರ್ಯಾಂಡ್ ಮಾಸ್ಟರ್ ಎಂದೇ ಖ್ಯಾತಿ ಗಳಿಸಿರುವ ವಿದಿತ್ ಎಸ್.ಗುಜರಾತಿ ಅವರು ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ.
‘ನಮಗೆ ನಿಧಾನವಾಗಿ ವಿಷಪ್ರಾಶನವಾಗುತ್ತಿದೆ. ಯಾರೂ ಇದರ ಬಗ್ಗೆ ಕಾಳಜಿ ವಹಿಸುವುದಿಲ್ಲವೇ? ಇದನ್ನು ಪರಿಹರಿಸುವುದು ಮೊದಲ ಆದ್ಯತೆಯಾಗಿರಬೇಕಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.
ದೆಹಲಿಯ ಗಾಳಿಯ ಗುಣಮಟ್ಟ ಅಪಾಯದ ಮಟ್ಟವನ್ನು ಮೀರಿರುವ ಬಗ್ಗೆ ಎಕ್ಯೂಐ ಅಂಕಿ ಅಂಶಗಳ ಸ್ಕ್ರೀನ್ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಎಕ್ಯೂಐ ಸೂಚ್ಯಂಕ 598ಕ್ಕೆ ತಲುಪಿರುವುದನ್ನು ಕಾಣಬಹುದು.
ದೆಹಲಿಯಲ್ಲಿ ಸೋಮವಾರ ಬೆಳಿಗ್ಗೆ ಹೊಗೆಯಿಂದ ಕೂಡಿದ ವಾತಾವರಣ ಕಂಡುಬಂದಿದ್ದು, ಎಕ್ಯೂಐ ಸೂಚ್ಯಂಕ 417ಕ್ಕೆ ತಲುಪಿದೆ. ಅಂದರೆ ಗಾಳಿಯ ಗುಣಮಟ್ಟ ಅತ್ಯಂತ ಕಳಪೆ ಮಟ್ಟಕ್ಕೆ ತಲುಪಿದೆ.
ಎಕ್ಯೂಐ ಪ್ರಮಾಣ ಸೊನ್ನೆಯಿಂದ 50 ರಷ್ಟಿದ್ದರೆ ‘ಉತ್ತಮ’ ಎಂದು, 51ರಿಂದ 100ರಷ್ಟಿದ್ದರೆ ‘ಸಮಾಧಾನಕರ’, 101ರಿಂದ 200ರಷ್ಟಿದ್ದರೆ ‘ಸಾಧಾರಣ’, 201 ರಿಂದ 300ರಷ್ಟಿದ್ದರೆ ‘ಕಳಪೆ’ ಹಾಗೂ 301ರಿಂದ 400ರಷ್ಟಿದ್ದರೆ ‘ಅತ್ಯಂತ ಕಳಪೆ’ ಎಂದು ಹೇಳಲಾಗುತ್ತದೆ. 401ರಿಂದ 450ರಷ್ಟು ಕಂಡು ಬಂದರೆ ‘ತೀವ್ರ ಕಳಪೆ’ ಹಾಗೂ 450ಕ್ಕಿಂತ ಹೆಚ್ಚಾದರೆ ‘ತೀವ್ರಕ್ಕಿಂತಲೂ ಅಪಾಯಕಾರಿ’ ಎಂದು ಪರಿಗಣಿಸಲಾಗುತ್ತದೆ.
ಭಾರತ, ಉತ್ತರ ಮೆಕ್ಸಿಕೊ, ನೇಪಾಳ ಸೇರಿದಂತೆ ಇನ್ನೂ ಹಲವು ದೇಶಗಳು ವಾಯುಮಾಲಿನ್ಯದಿಂದ ತತ್ತರಿಸುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.