ನವದೆಹಲಿ: ವಾಯುಮಾಲಿನ್ಯ ಸಮಸ್ಯೆ ನಿಯಂತ್ರಣಕ್ಕೆ ಬಾರದಿದ್ದರಿಂದ ಅಸಮಾಧಾನ ವ್ಯಕ್ತಪಡಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (ಎನ್ಜಿಟಿ), ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ (ಸಿಪಿಸಿಬಿ) ₹25 ಕೋಟಿಯನ್ನು ದಂಡದ ರೂಪದಲ್ಲಿ ಠೇವಣಿ ಇಡುವಂತೆ ದೆಹಲಿ ಸರ್ಕಾರಕ್ಕೆ ಸೂಚಿಸಿದೆ.
ಎನ್ಜಿಟಿ ಮುಖ್ಯಸ್ಥ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯಲ್ ಅವರ ನೇತೃತ್ವದ ಪೀಠವು, ಆಮ್ ಆದ್ಮಿ ಪಕ್ಷದ ಸರ್ಕಾರಕ್ಕೆ ಈ ಸೂಚನೆ ನೀಡಿದೆ. ಈ ಮೊದಲೇ ಸ್ಪಷ್ಟ ನಿರ್ದೇಶನ ನೀಡಿದ ನಡುವೆಯೂ, ಈ ನಾಲ್ಕೂವರೆ ವರ್ಷಗಳಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.
ಪ್ಲಾಸ್ಟಿಕ್, ಚರ್ಮದ ಉತ್ಪನ್ನಗಳು, ರಬ್ಬರ್ ಸುಡುವುದರಿಂದ ವಾಯುಮಾಲಿನ್ಯ ವಿಪರೀತವಾಗುತ್ತಿದೆ. ಅಲ್ಲದೆ, ಈ ವಸ್ತುಗಳನ್ನು ತಯಾರಿಸುವ ಅನಧಿಕೃತ ಕೈಗಾರಿಕಾ ಘಟಕಗಳು ಮುಂದ್ಕ ಮತ್ತು ನೀಲ್ವಲ್ ಗ್ರಾಮದ ಕೃಷಿ ಭೂಮಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಈ ಗ್ರಾಮದ ನಿವಾಸಿಗಳಾದ ಸತೀಶ್ಕುಮಾರ್ ಮತ್ತು ಮಹಾವೀರ್ ಸಿಂಗ್ ಎಂಬುವರು ಎನ್ಜಿಟಿ ಮೊರೆ ಹೋಗಿದ್ದರು.
ಎನ್ಜಿಟಿಯು ಈ ಬಗ್ಗೆ, ದೆಹಲಿ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಸಂಬಂಧಪಟ್ಟ ಪಾಲಿಕೆಯ ಅಧಿಕಾರಿಗಳು, ಪೊಲೀಸರು ಮತ್ತು ಇತರೆ ಅಧಿಕಾರಿಗಳನ್ನು ಈ ತಪ್ಪಿಗೆ ಹೊಣೆ ಮಾಡಿ ಕ್ರಮ ಕೈಗೊಳ್ಳುವಂತೆ ಹೇಳಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.