ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶನಿವಾರ ವೇಗವಾಗಿ ಬೀಸಿದ ಗಾಳಿಯಿಂದಾಗಿ, ವಾಯು ಗುಣಮಟ್ಟ ಸ್ವಲ್ಪಮಟ್ಟಿಗೆ ಸುಧಾರಿಸಿದೆ. ಮುಂದಿನ ಎರಡು ದಿನಗಳಲ್ಲಿ ವಾತಾವರಣದಲ್ಲಿರುವ ಮಾಲಿನ್ಯಕಾರಕ ಅಂಶಗಳ ಪ್ರಮಾಣ ಮತ್ತಷ್ಟೂ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ(ಸಿಪಿಸಿಬಿ) ‘ಸಮೀರ್ ಆ್ಯಪ್’ನ ಅಂಕಿ–ಅಂಶಗಳಂತೆ, ಶನಿವಾರ ಬೆಳಿಗ್ಗೆ 8ಗಂಟೆ ವರೆಗಿನ ಮಾಹಿತಿ ಪ್ರಕಾರ ನಗರದಲ್ಲಿ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) 449ರಷ್ಟು ದಾಖಲಾಗಿದೆ. ಶುಕ್ರವಾರ ಈ ಪ್ರಮಾಣ 462ರಷ್ಟಿತ್ತು.
ನಿರ್ಬಂಧಗಳ ನಡುವೆಯೂ ದೀಪಾವಳಿ ಹಿನ್ನೆಲೆಯಲ್ಲಿ ವಿಪರೀತವಾಗಿ ಪಟಾಕಿಗಳನ್ನು ಸಿಡಿಸಿದ ಪರಿಣಾಮ, ದೆಹಲಿಯ ಗಾಳಿಯ ಗುಣಮಟ್ಟ ಗುರುವಾರ ಕಳಪೆಯಾಗಿತ್ತು. ಕಳೆದ ಐದು ವರ್ಷಗಳಿಗೆ ಹೋಲಿಸಿದರೆ, ಈ ಬಾರಿ ವಾಯು ಮಾಲಿನ್ಯ ಅಧಿಕವಾಗಿತ್ತು. ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯ ಸುಡುತ್ತಿರುವುದು ಸಹ ಮಾಲಿನ್ಯ ಹೆಚ್ಚಲು ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.