ನವದೆಹಲಿ:ಏರ್ಸೆಲ್–ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಅವರನ್ನು ಬಂಧಿಸದಂತೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ಇಲ್ಲಿನ ವಿಶೇಷ ನ್ಯಾಯಾಲಯ ಮಾರ್ಚ್ 25ರವರೆಗೆ ಮುಂದೂಡಿದೆ.
ಏರ್ಸೆಲ್–ಮ್ಯಾಕ್ಸಿಸ್ ಪ್ರಕರಣದಲ್ಲಿ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (ಎಫ್ಐಪಿಬಿ) ಅನುಮತಿ ನೀಡುವಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಜಾರಿನಿರ್ದೇಶನಾಲಯವು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿತ್ತು.
ಇಬ್ಬರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯ ವಾದ ಮಂಡಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಸಿಬಿಐ ಪರ ವಕೀಲ ಸೋನಿಯಾ ಮಾಥೂರ್, ಇ.ಡಿ ಪರ ವಕೀಲರಾದ ನಿತೇಶ್ ರಾಣಾ ಅವರು ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಎದುರು ವಾದ ಮಂಡಿಸಿದರು. ಜಾಮೀನು ಅರ್ಜಿ ಸಲ್ಲಿಸಿ, ಸಾಕಷ್ಟು ಕಾಲಾವಕಾಶ ಮುಗಿದಿದೆ. ಈಗ ಮತ್ತೆ, ಮುಂದೂಡುತ್ತಿರುವುದು ಸರಿಯಲ್ಲ ಎಂದುಚಿದಂಬರಂ ಮತ್ತು ಕಾರ್ತಿ ಪರ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನುಸಿಂಘ್ವಿ ಅವರು ಆಕ್ಷೇಪ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.