ADVERTISEMENT

ಅಜಿತ್‌ ಪವಾರ್ ವಿಮಾನ ಅಪಘಾತ: ಫೆ.28ರೊಳಗೆ ಪ್ರಾಥಮಿಕ ತನಿಖಾ ವರದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 16:07 IST
Last Updated 22 ಫೆಬ್ರುವರಿ 2026, 16:07 IST
ಅಜಿತ್‌ ಪವಾರ್
ಅಜಿತ್‌ ಪವಾರ್   

ಪುಣೆ: ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ವಿಮಾನ ಅಪಘಾತದಲ್ಲಿ ಮೃತಪಟ್ಟ ವಿಷಯಕ್ಕೆ ಸಂಬಂಧಿಸಿದ ಪ್ರಾಥಮಿಕ ತನಿಖಾ ವರದಿಯನ್ನು ಇದೇ 28 ಅಥವಾ ಅದಕ್ಕೂ ಮೊದಲು ಬಿಡುಗಡೆಯಾಗುವ ಸಾಧ್ಯತೆ ಇದೆ’ ಎಂದು ಕೇಂದ್ರ ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೊಲ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮೊಹೊಲ್‌, ‘ನಾಗರಿಕ ವಿಮಾನಯಾನ ನಿರ್ದೇಶನಾಲಯವು ಪತ್ರಿಕಾ ಪ್ರಕಟಣೆ ನೀಡಿ, ಈ ಪ್ರಕರಣದ ಬಗ್ಗೆ ನಡೆಯುತ್ತಿರುವ ವಿಚಾರಣೆ ಕುರಿತು ಈಗಾಗಲೇ ಸ್ಪಷ್ಟನೆ ನೀಡಿದೆ. ವರದಿ ಬಿಡುಗಡೆಯಾದ ನಂತರ, ತನಿಖೆಯ ಕುರಿತು ಎಲ್ಲ ವಿವರಗಳನ್ನು ಸಾರ್ವಜನಿಕಗೊಳಿಸಲಾಗುತ್ತದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನಾನು ಯಾರ ಹೇಳಿಕೆಗಳ ಬಗ್ಗೆಯೂ ಪ್ರತಿಕ್ರಿಯಿಸಲು ಬಯಸುವುದಿಲ್ಲ’ ಎಂದು ಮೊಹೋಲ್ ಹೇಳಿದರು.

ಇತ್ತೀಚೆಗೆ ಶಾಸಕ ರೋಹಿತ್ ಪವಾರ್ ಅವರು ಸುದ್ದಿಗೋಷ್ಠಿಗಳನ್ನು ನಡೆಸಿ, ವಿಮಾನ ಅಪಘಾತ ಹಾಗೂ ಅಪಘಾತಕ್ಕೀಡಾದ ವಿಮಾನ ಕಂಪನಿಗೆ ಸಂಬಂಧಿಸಿದ ಅಕ್ರಮಗಳು ಮತ್ತು ಇತರ ತಾಂತ್ರಿಕ ವೈಪರೀತ್ಯಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಪ್ರಧಾನ ನರೇಂದ್ರ ಮೋದಿ ಅವರಿಗೆ ಶನಿವಾರ ಪತ್ರ ಬರೆದಿದ್ದ ಅವರು, ವಿಮಾನ ಅಪಘಾತದ ತನಿಖೆ ಪೂರ್ಣಗೊಳ್ಳುವವರೆಗೆ ನಾಗರಿಕ ವಿಮಾನಯಾನ ಸಚಿವ ಕೆ. ರಾಮ್‌ಮೋಹನ್ ನಾಯ್ಡು ಅವರಿಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಸೂಚಿಸುವಂತೆ‌ ಒತ್ತಾಯಿಸಿದ್ದಾರೆ.

ADVERTISEMENT

‘ವಿಎಸ್ಆರ್ ಕಂಪನಿ ಮತ್ತು ರಾಮಮೋಹನ್ ನಾಯ್ಡು ಅವರ ಪಕ್ಷ (ಟಿಡಿಪಿ) ಜೊತೆಗಿನ ಸಂಪರ್ಕದ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಈ ಸಂಪರ್ಕಗಳ ಕುರಿತು ಅಂತರರಾಷ್ಟ್ರೀಯ ಸಂಸ್ಥೆಗಳ ಸಹಯೋಗದೊಂದಿಗೆ, ಸ್ವತಂತ್ರ ಮತ್ತು ಸಮರ್ಥ ಪ್ರಾಧಿಕಾರವು ತನಿಖೆ ನಡೆಸಬೇಕು’ ಎಂದು ರೋಹಿತ್ ಪವಾರ್‌ ಪತ್ರದಲ್ಲಿ ವಿವರಿಸಿದ್ದಾರೆ. ಆ ಪತ್ರದ ಪ್ರತಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಳುಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.