ಮುಂಬೈ: ಅನಿರೀಕ್ಷಿತ ಬೆಳವಣಿಗೆಯಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಎನ್ಸಿಪಿ ನಾಯಕ ಅಜಿತ್ ಪವಾರ್ ಭಾನುವಾರ ಮಧ್ಯಾಹ್ನ ಟ್ವೀಟ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀಗೆ ಧನ್ಯವಾದಗಳು. ಮಹಾರಾಷ್ಟ್ರದ ಜನರ ಕಲ್ಯಾಣಕ್ಕಾಗಿ ಶ್ರಮಿಸುವ ಸ್ಥಿರ ಸರ್ಕಾರವನ್ನು ನೀಡುತ್ತೇವೆ ಎಂದು ಈ ಮೂಲಕ ನಾವು ಖಚಿತಪಡಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ಗಣ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿದ್ದಕ್ಕೆ ಶುಭ ಕೋರಿದ ಸ್ಮೃತಿ ಇರಾನಿ, ಜೆ.ಪಿ.ನಡ್ಡಾ, ಅಮಿತ್ ಶಾ, ನಿರ್ಮಲಾ ಸೀತಾರಾಮನ್, ಧರ್ಮೇಂದ್ರ ಪ್ರಧಾನ್, ಅನುರಾಗ್ ಠಾಕೂರ್, ರಾಮ್ದಾಸ್ ಅಥಾವಳೆ, ಪಿಯೂಷ್ ಗೋಯಲ್ಸೇರಿ ಇತರೆ ಬಿಜೆಪಿ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿದ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಈ ಅರ್ಜಿಯ ವಿಚಾರಣೆ ನಡೆಸಿದ ಕೊರ್ಟ್ ಬೆಳಗ್ಗೆಯಷ್ಟೇ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆ ಮಾಡುವಂತೆ ಆಹ್ವಾನಿಸಿದ ಪತ್ರ ಮತ್ತು ಸರ್ಕಾರ ರಚನೆ ಮಾಡಲು ದೇವೇಂದ್ರ ಫಡಣವೀಸ್ ಅವರಿಗೆ ಇರುವ ಅಗತ್ಯ ಸಂಖ್ಯೆಯ ಶಾಸಕರ ಸಹಿಯುಳ್ಳ ಪತ್ರವನ್ನು ಸೋಮವಾರ ಬೆಳಗ್ಗೆ ಹಾಜರುಪಡಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ.
ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿ ಶನಿವಾರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಅಜಿತ್ ಪವಾರ್ ಅವರನ್ನು ಎನ್ಸಿಪಿಯು ಶನಿವಾರ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ಕಿತ್ತೆಸೆದಿತ್ತು.
ಇವನ್ನು ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.