ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಉಗ್ರ ಸಂಘಟನೆ ಅಲ್ ಖೈದಾ ಬೆಳೆಯುತ್ತಿದ್ದು, ಅಕ್ರಮ ಬಾಂಬ್ ತಯಾರಿಕೆ ಅತಿರೇಕವಾಗಿದೆ ಎಂದು ರಾಜ್ಯಪಾಲ ಜಗದೀಪ್ ಧನ್ಕರ್ ಗಂಭೀರ ಆರೋಪ ಮಾಡಿದ್ದಾರೆ.
ಈ ವಿಚಾರವಾಗಿ ಶನಿವಾರ ಮಾತನಾಡಿರುವ ಅವರು, 'ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಅಪಾಯದಲ್ಲಿದೆ. ಇಲ್ಲಿ ಉಗ್ರ ಸಂಘಟನೆಯಾದ ಅಲ್ ಖೈದಾ ಬೆಳೆಯುತ್ತಿದೆ. ಅಕ್ರಮ ಬಾಂಬ್ ತಯಾರಿಕೆ ಅತಿರೇಕವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಏನು ಮಾಡುತ್ತಿದೆ ಎಂದು ತಿಳಿಯಲು ಬಯಸುತ್ತೇನೆ' ಎಂದು ಹೇಳಿದ್ದಾರೆ.
'ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ರಾಜಕೀಯ ನಾಯಕರ ಹತ್ಯೆ ಮಾಡಲಾಗುತ್ತಿದೆ. ಆದರೂ ಗೃಹ ಕಾರ್ಯದರ್ಶಿ ಅಥವಾ ಡಿಜಿಪಿ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ’ ಎಂದು ರಾಜ್ಯಪಾಲರು ಈ ಹಿಂದೆ ಟ್ವೀಟ್ ಮಾಡಿದ್ದರು.
ಕಳೆದ ಕೆಲ ತಿಂಗಳಿಂದ ಪಶ್ಚಿಮ ಬಂಗಾಳ ರಾಜ್ಯಪಾಲರು ಅಲ್ಲಿನ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನವನ್ನು ಹೊರಹಾಕುತ್ತಲೇ ಇದ್ದಾರೆ.
ಮುಂದಿನ ಕೆಲ ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವಿನ ರಾಜಕೀಯ ಸಂಘರ್ಷಗಳು ತಾರಕಕ್ಕೇರಿದ್ದು, ರಾಜ್ಯಪಾಲರ ಆರೋಪಗಳು ಮಹತ್ವ ಪಡೆದುಕೊಂಡಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.