ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ
ಲಖನೌ: ಉತ್ತರ ಪ್ರದೇಶದ ಪ್ರತಿಯೊಂದು ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ನಿರ್ಮಿಸುವ ಎಲ್ಲಾ ಹಾಸ್ಟೆಲ್ಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ಸಂವಿಧಾನವನ್ನು ರಕ್ಷಿಸುವ ಹಕ್ಕುಗಳ ಹೊರತಾಗಿಯೂ ಅಂಬೇಡ್ಕರ್ ಸೇರಿದಂತೆ ದಲಿತ ಮತ್ತು ಹಿಂದುಳಿದ ನಾಯಕರನ್ನು ಗೌರವಿಸುವಲ್ಲಿ ವಿರೋಧ ಪಕ್ಷದವರು ವಿಫಲರಾಗಿದ್ದಾರೆ’ ವಾಗ್ದಾಳಿ ನಡೆಸಿದ್ದಾರೆ.
ಅಂಬೇಡ್ಕರ್ ಪರಂಪರೆಯನ್ನು ಜಗತ್ತಿಗೆ ಸಾರುವಲ್ಲಿ ಬಿಜೆಪಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ಬದ್ಧತೆ ಪ್ರದರ್ಶಿಸಿದೆ ಎಂದು ಅವರು ಹೇಳಿದ್ದಾರೆ.
‘ನಮ್ಮ ಸರ್ಕಾರವು ಅಂಬೇಡ್ಕರ್ ಅವರ ಗೌರವಾರ್ಥವಾಗಿ ‘ಪಂಚ ತೀರ್ಥ’ ಸ್ಥಾಪನೆ ಸೇರಿದಂತೆ ಲಖನೌದಲ್ಲಿ ಅಂತರರಾಷ್ಟ್ರೀಯ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರವನ್ನು ನಿರ್ಮಿಸುವ ಮೂಲಕ ಹಲವು ಐತಿಹಾಸಿಕ ಕ್ರಮಗಳನ್ನು ಕೈಗೊಂಡಿದೆ. ಹಾಗೆಯೇ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್ಟಿ) ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾಗುವ ಎಲ್ಲಾ ಹಾಸ್ಟೆಲ್ಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಿಡಲು ನಾವು ನಿರ್ಧರಿಸಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷಕ್ಕೆ (ಎಸ್ಪಿ) ಹಲವು ಅವಕಾಶಗಳಿದ್ದವು. ಆದರೆ, ಅಂಬೇಡ್ಕರ್ ಹೆಸರಿನಲ್ಲಿ ಎಂದಿಗೂ ಸಂಸ್ಥೆಗಳನ್ನು ಸ್ಥಾಪಿಸಲಿಲ್ಲ. ಬದಲಾಗಿ ರಾಜಕೀಯ ಘೋಷಣೆಗಳಲ್ಲಿ ತೊಡಗಿತ್ತು ಎಂದು ಯೋಗಿ ಗುಡುಗಿದ್ದಾರೆ.
ದಲಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಮ್ಮ ಸರ್ಕಾರ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ಹಾಸ್ಟೆಲ್ ನಿರ್ಮಿಸಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.