ADVERTISEMENT

ಗಾಂಧಿನಗರದಿಂದ ನಾಮಪತ್ರ ಸಲ್ಲಿಸಿದ ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2019, 11:19 IST
Last Updated 30 ಮಾರ್ಚ್ 2019, 11:19 IST
   

ಅಹಮದಾಬಾದ್‌: ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಶನಿವಾರ ನಾಮಪತ್ರ ಸಲ್ಲಿಸಿದರು.

ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ಅರುಣ್‌ ಜೇಟ್ಲಿ, ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಹಾಗೂ ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾಣಿ ಅವರು ಶಾ ಜೊತೆಗಿದ್ದರು.

ನಾಮಪತ್ರ ಸಲ್ಲಿಕೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅರುಣ್‌ ಜೇಟ್ಲಿ, ‘ಅಡ್ವಾಣಿ, ವಾಜಪೇಯಿಯಂಥ ಹಿರಿಯ ನಾಯಕರು ಪ್ರತಿನಿಧಿಸಿದ್ದ ಕ್ಷೇತ್ರವಿದು. ಈ ಕ್ಷೇತ್ರ ಎಷ್ಟು ಮುಖ್ಯ ಎಂಬುದನ್ನು ಅರಿತುಕೊಂಡು ಪಕ್ಷದ ಅಧ್ಯಕ್ಷರನ್ನೇ ಈ ಕ್ಷೇತ್ರದಿಂದ ಕಣಕ್ಕಿಳಿಸಲು ಎಲ್ಲ ನಾಯಕರು ನಿರ್ಧರಿಸಿದರು. ದಾಖಲೆಯ ಮತಗಳಿಂದ ಶಾ ಇಲ್ಲಿ ಗೆಲುವು ಸಾಧಿಸಲಿದ್ದಾರೆ. ಅಷ್ಟೇ ಅಲ್ಲದೆ ಗುಜರಾತ್‌ನ ಎಲ್ಲ 26 ಕ್ಷೇತ್ರಗಳಲ್ಲೂ ನಮ್ಮ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ. ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದು ಖಚಿತ’ ಎಂದರು.

ADVERTISEMENT

ನಾಮಪತ್ರ ಸಲ್ಲಿಕೆಗೂ ಮುನ್ನ ನಾರಾಯಣಪುರದಲ್ಲಿ ಆಯೋಜಿಸಿದ್ದ ರ್‍ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ‘ರಾಷ್ಟ್ರವನ್ನು ಯಾರು ಮುನ್ನಡೆಸಬೇಕು ಎಂಬ ಪ್ರಶ್ನೆಯನ್ನು ಮುಂದಿಟ್ಟುಕೊಂಡು ಈ ಬಾರಿಯ ಚುನಾವಣೆಯನ್ನು ಎದುರಿಸಲಾಗುತ್ತಿದೆ. ಹಿಮಾಚಲದಿಂದ ಕನ್ಯಾಕುಮಾರಿಯವರೆಗೆ, ಅಸ್ಸಾಂನಿಂದ ಗಾಂಧಿನಗರದವರೆಗೆ ಯಾರಲ್ಲಿ ಈ ಪ್ರಶ್ನೆಯನ್ನು ಕೇಳಿದರೂ, ಮೋದಿ... ಮೋದಿ... ಎಂದು ಘೋಷಣೆ ಕೂಗುತ್ತಾರೆ’ ಎಂದರು.

1980ರ ದಶಕದಲ್ಲಿ ಬಿಜೆಪಿಯಲ್ಲಿ ವಾರ್ಡ್‌ಮಟ್ಟದ ಕಾರ್ಯಕರ್ತನಾಗಿ ಕೆಲಸ ಆರಂಭಿಸಿ ದಿನಗಳಿಂದ ಈವರೆಗಿನ ಹೋರಾಟವನ್ನು ಸ್ಮರಿಸಿಕೊಂಡ ಶಾ, ‘ನನ್ನೊಳಗಿನಿಂದ ಬಿಜೆಪಿಯನ್ನು ತೆಗೆದರೆ ನಾನು ಶೂನ್ಯವಾಗುತ್ತೇನೆ. ಈಗ ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ನರೇಂದ್ರ ಮೋದಿ ನೇತೃತ್ವದಲ್ಲಿ ಈ ದೇಶ ಸುರಕ್ಷಿತವಾಗಿರುತ್ತದೆ. ಆದ್ದರಿಂದ ರಾಜ್ಯದ ಎಲ್ಲ 26 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಬೇಕು’ ಎಂದು ಮನವಿ ಮಾಡಿಕೊಂಡರು.

ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಮತ್ತು ನಿತಿನ್‌ ಗಡ್ಕರಿ, ಎನ್‌ಡಿಎ ಮಿತ್ರಪಕ್ಷಗಳ ಪ್ರತಿನಿಧಿಗಳಾದ ಉದ್ಧವ್‌ ಠಾಕ್ರೆ, ಪ್ರಕಾಶ್‌ ಸಿಂಗ್‌ ಬಾದಲ್ ಹಾಗೂ ರಾಮ್‌ ವಿಲಾಸ್‌ ಪಾಸ್ವಾನ್‌ ವೇದಿಕೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.