ಅಮರಾವತಿ: ಅಕ್ಟೋಬರ್ 15ರಿಂದ ಕಾಲೇಜುಗಳನ್ನು ಪುನರಾರಂಭಿಸಲು ಆಂಧ್ರ ಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ಈ ವಿಚಾರಕ್ಕೆ ಸಂಬಂಧಿಸಿ ನಡೆದ ಪರಾಮರ್ಶೆ ಸಭೆಯಲ್ಲಿ ಮಾರ್ಗದರ್ಶಿಯೊಂದನ್ನು ಪ್ರಸ್ತಾವಿಸಿರುವ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳ ಅಭಿಪ್ರಾಯ ಕೇಳಿದ್ದಾರೆ.
ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಮಾರ್ಚ್ ತಿಂಗಳಿಂದ ಶಾಲೆ, ಕಾಲೇಜು ಮತ್ತು ಇತರ ಶೈಕ್ಷಣಿಕ ಸಂಸ್ಥೆಗಳು ಕಾರ್ಯಾಚರಿಸುತ್ತಿಲ್ಲ.
ಒಟ್ಟು ದಾಖಲಾತಿ ಅನುಪಾತವನ್ನು ಶೇ 90ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ಗಮನಹರಿಸುವಂತೆಯೂ ಪರಾಮರ್ಶೆ ಸಭೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ರಾಜ್ಯದಾದ್ಯಂತ ವಿಶ್ವವಿದ್ಯಾಯಗಳಲ್ಲಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ.
3 ಅಥವಾ 4 ವರ್ಷಗಳ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ 10 ತಿಂಗಳ ಅಪ್ರೆಂಟಿಸ್ಶಿಪ್ಗೆ ದಾಖಲಾಗಬೇಕು. ಅಪ್ರೆಂಟಿಸ್ಶಿಪ್ ಮುಗಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗ, ಕೌಶಲಾಭಿವೃದ್ಧಿ ತರಬೇತಿ ನೀಡಬೇಕು ಎಂದು ಅಧಿಕಾರಿಗಳಿಗೆ ರೆಡ್ಡಿ ನಿರ್ದೇಶಿಸಿದ್ದಾರೆ.
ಅಕ್ರಮ ಎಸಗುವ ಕಾಲೇಜುಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ವಿಜಯನಗರ ಮತ್ತು ಪ್ರಕಾಶಂ ಜಿಲ್ಲೆಗಳಲ್ಲಿ ವಿಶ್ವವಿದ್ಯಾಲಯಗಳ ಸ್ಥಾಪನೆಗೂ ಅನುಮತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.