
ಚಂದ್ರಬಾಬು ನಾಯ್ಡು
ಅಮರಾವತಿ: ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗಾದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತದಿಂದ 10 ಮಂದಿ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಶನಿವಾರ ಘೋಷಿಸಿದರು.
ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ನಾಯ್ಡು, ಪೊಲೀಸರಿಗೆ ಮುಂಚಿತವಾಗಿ ಮಾಹಿತಿ ನೀಡಲು ವಿಫಲವಾದ ಕಾರಣ ಸಾಕಷ್ಟು ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಲಿಲ್ಲ ಎಂದು ಸಂಘಟಕರನ್ನು ದೂಷಿಸಿದರು.
ಕಾಶಿಬುಗ್ಗಾದಲ್ಲಿ ಒಬ್ಬ ವ್ಯಕ್ತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು ನಿರ್ಮಿಸಿದ್ದರು. ಮಂಗಳಕರ ಕಾರ್ತಿಕ ಮಾಸದ ಸಂದರ್ಭದಲ್ಲಿ ದರ್ಶನ ಪಡೆಯಲು ಅನೇಕ ಭಕ್ತರು ಅಲ್ಲಿಗೆ ಹೋಗಿದ್ದರು. ದೇವಸ್ಥಾನಕ್ಕೆ ಅಪಾರ ಪ್ರಮಾಣದ ಭಕ್ತರು ಬರುವ ಸೂಚನೆ ಇದ್ದರೂ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ಪೊಲೀಸ್ ರಕ್ಷಣೆ ಒದಗಿಸಿ ಜನಸಂದಣಿಯನ್ನು ನಿಯಂತ್ರಿಸಬಹುದಿತ್ತು. ಘಟನೆಯು ಅತ್ಯಂತ ನೋವಿನ ಮತ್ತು ಖಂಡನೀಯವಾದದ್ದಾಗಿದೆ ಎಂದು ವಿವರಿಸಿದ ಮುಖ್ಯಮಂತ್ರಿ,, ಮುಗ್ಧ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡರು. ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಈ ದುರಂತಕ್ಕೆ ಕ್ರಮಬದ್ಧತೆ ಮತ್ತು ಶಿಸ್ತಿನ ಕೊರತೆಯೇ ಕಾರಣ ಎಂದು ಅವರು ಹೇಳಿದರು.
ಶ್ರೀಕಾಕುಳಂ ಜಿಲ್ಲೆಯ ದೇವಾಲಯದಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದ ಬಗ್ಗೆ ವೈಎಸ್ಆರ್ಸಿಪಿ ಮುಖ್ಯಸ್ಥ ವೈ. ಎಸ್. ಜಗನ್ ಮೋಹನ್ ರೆಡ್ಡಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. 10 ಭಕ್ತರು ಪ್ರಾಣ ಕಳೆದುಕೊಂಡಿರುವುದು ಹೃದಯವಿದ್ರಾವಕವಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೃತರ ಕುಟುಂಬಗಳಿಗೆ ನೆರವು ನೀಡುವಂತೆ ಮತ್ತು ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಆರೈಕೆ ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.