ADVERTISEMENT

ಆಂಧ್ರ ರೈಲು ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ, 50ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಅಕ್ಟೋಬರ್ 2023, 2:34 IST
Last Updated 30 ಅಕ್ಟೋಬರ್ 2023, 2:34 IST
<div class="paragraphs"><p>ಆಂಧ್ರ ರೈಲು ಅಪಘಾತ</p></div>

ಆಂಧ್ರ ರೈಲು ಅಪಘಾತ

   

ಚಿತ್ರ ಕೃಪೆ ಪಿಟಿಐ

ನವದೆಹಲಿ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಹೌರಾ-ಚೆನ್ನೈ ಮಾರ್ಗದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿದೆ ಮತ್ತು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ.ದೀಪಿಕಾ ಸೋಮವಾರ ತಿಳಿಸಿದ್ದಾರೆ.

ADVERTISEMENT

ಸಂತಾಪ ಸೂಚಿಸಿದ ಪ್ರಧಾನಿ: ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ರೈಲ್ವೆ ಸಚಿವರೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅಪಘಾತದಲ್ಲಿ ಸಾವನ್ನಪ್ಪಿರುವವರಿಗೆ ಸಂತಾಪ ಸೂಚಿಸಿರುವ ಪ್ರಧಾನಿ, ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ಅಲಮಂದ, ಕಂತಕಪಲ್ಲಿ ಸೆಕ್ಷನ್ ನಡುವೆ ಸಂಭವಿಸಿದ ‌ರೈಲು ಅಪಘಾತದ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜತೆ ಮಾತನಾಡಿದರು ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.

ಘಟನಾ ಸ್ಥಳಕ್ಕೆ ಸಿಎಂ ಭೇಟಿ:

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಹಾಗೂ ಗಾಯಗೊಂಡವರಿಗೆ ₹2 ಲಕ್ಷ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಮೃತರ ಕುಟುಂಬಗಳಿಗೆ ₹10 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50 ಸಾವಿರ ಧನಸಹಾಯ ಘೋಷಿಸಿದ್ದಾರೆ ಎಂದು ಪಿಎಂಒ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.