ADVERTISEMENT

ಕರೆಂಟ್ ತೆಗೆದಿದ್ದಕ್ಕೆ ಆಕ್ರೋಶ: ಫಡಣವೀಸ್ ಮನೆಗೆ ಬಾಂಬ್ ಬೆದರಿಕೆ ಹಾಕಿದ ಯುವಕ!

ಪಿಟಿಐ
Published 28 ಮಾರ್ಚ್ 2023, 11:41 IST
Last Updated 28 ಮಾರ್ಚ್ 2023, 11:41 IST
ದೇವೇಂದ್ರ ಫಡಣವೀಸ್
ದೇವೇಂದ್ರ ಫಡಣವೀಸ್   

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರ ನಾಗ್ಪುರದ ಮನೆಯಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿ ದೂರವಾಣಿ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ ಗ್ರಾಮದಲ್ಲಿ ವಿದ್ಯುತ್ ಕಡಿತಗೊಳಿಸಿದ್ದಕ್ಕೆ ಆಕ್ರೋಶಗೊಂಡು ಬಾಂಬ್ ಇಟ್ಟಿರುವುದಾಗಿ ಸುಳ್ಳು ಕರೆ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನಾಗ್ಪುರದ ಕನ್ಹಾನ್ ಪಟ್ಟಣದಿಂದ 30 ಕಿಮೀ ದೂರದ ಗ್ರಾಮವೊಂದರಲ್ಲಿ 30 ವರ್ಷದ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

ADVERTISEMENT

ತಡರಾತ್ರಿ 2 ಗಂಟೆ ಸುಮಾರಿಗೆ ನಾಗ್ಪುರದ ಪೊಲೀಸ್ ಠಾಣೆಗೆ ಕರೆ ಮಾಡಿದ್ದ ಆರೋಪಿ, ದೇವೇಂದ್ರ ಫಡಣವೀಸ್ ಅವರ ಮನೆಯಲ್ಲಿ ಬಾಂಬ್‌ ಇಟ್ಟಿರುವುದಾಗಿ ಹೇಳಿದ್ದು, ಥಟ್ಟನೆ ಕರೆಯನ್ನು ಸ್ಥಗಿತಗೊಳಿಸಿದ್ದ ಎಂದು ಅಮಿತೇಶ್ ಹೇಳಿದ್ದಾರೆ.

ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ಒಳಗೊಂಡ ಪೊಲೀಸರ ತಂಡ ಕೂಡಲೇ ಸ್ಥಳಕ್ಕೆ ದೌಡಾಯಿಸಿ ತಪಾಸಣೆ ನಡೆಸಿತ್ತು. ಆದರೆ ಸ್ಥಳದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮ್ಮ ಗ್ರಾಮದಲ್ಲಿ ವಿದ್ಯುತ್ ಕಡಿತ ಮಾಡಲಾಗಿತ್ತು. ಇದರಿಂದ ಆಕ್ರೋಶಗೊಂಡು ಬಾಂಬ್ ಇಟ್ಟಿರುವುದಾಗಿ ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿದ್ದೇನೆ ಎಂದು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಸದ್ಯ ದೇವೇಂದ್ರ ಫಡಣವೀಸ್ ಅವರ ಕುಟುಂಬ ಮುಂಬೈನಲ್ಲಿ ನೆಲೆಸಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.