ನವದೆಹಲಿಯ ಇ.ಡಿ ಕೇಂದ್ರ ಕಚೇರಿಯಲ್ಲಿ ವಿಚಾರಣೆಗಾಗಿ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಮಂಗಳವಾರ ಹಾಜರಾದರು
–ಪಿಟಿಐ ಚಿತ್ರ
ನವದೆಹಲಿ: ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಸಂಬಂಧ ರಿಲಯನ್ಸ್ ಸಮೂಹದ ಅಧ್ಯಕ್ಷ ಅನಿಲ್ ಅಂಬಾನಿ ಅವರು ಜಾರಿ ನಿರ್ದೇಶನಾಲಯದ (ಇ.ಡಿ) ಎದುರು ಮಂಗಳವಾರ ವಿಚಾರಣೆಗೆ ಹಾಜರಾದರು.
ದೆಹಲಿಯ ಇ.ಡಿ. ಕೇಂದ್ರ ಕಚೇರಿಗೆ ಬೆಳಿಗ್ಗೆ 10.50ಕ್ಕೆ ಹಾಜರಾದ ಅನಿಲ್ ಅವರಿಂದ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.
50 ಕಂಪನಿಗಳ 35 ಪ್ರದೇಶಗಳು ಹಾಗೂ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕರು ಸೇರಿದಂತೆ 25 ವ್ಯಕ್ತಿಗಳಿಗೆ ಸೇರಿದ ಜಾಗಗಳಲ್ಲಿ ಇ.ಡಿ ಅಧಿಕಾರಿಗಳು ಜುಲೈ 24ರಂದು ಶೋಧ ಕಾರ್ಯ ನಡೆಸಿದ್ದರು. ಅಲ್ಲದೆ, ವಿಚಾರಣೆಗೆ ಹಾಜರಾಗುವಂತೆ ಅನಿಲ್ ಅಂಬಾನಿ ಸೇರಿದಂತೆ ಸಮೂಹ ಸಂಸ್ಥೆಗಳ ಕಾರ್ಯನಿರ್ವಾಹಕರಿಗೆ ಸಮನ್ಸ್ ನೀಡಿದ್ದರು.
ಅನಿಲ್ ಅಂಬಾನಿ ಸಮೂಹ ಸಂಸ್ಥೆಗೆ ₹68 ಕೋಟಿ ಮೊತ್ತಕ್ಕೆ ನಕಲಿ ಬ್ಯಾಂಕ್ ಗ್ಯಾರಂಟಿ ನೀಡಿದ್ದ ಆರೋಪದಡಿ ಒಡಿಶಾದ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕ ಪಾರ್ಥಸಾರಥಿ ಬಿಸ್ವಾಲ್ ಅವರನ್ನು ಇ.ಡಿ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿದ್ದರು.
ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಸೇರಿದಂತೆ ಅನಿಲ್ ಅಂಬಾನಿ ಅವರ ಬಹು ಸಮೂಹ ಸಂಸ್ಥೆಗಳಿಂದ ₹17 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಹಣ ಅಕ್ರಮ ನಡೆಸಿರುವುದರ ವಿರುದ್ಧ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.