ADVERTISEMENT

ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟ ಅಣ್ಣಾ ಹಜಾರೆ

ಪಿಟಿಐ
Published 29 ಜನವರಿ 2021, 15:52 IST
Last Updated 29 ಜನವರಿ 2021, 15:52 IST
ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ
ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ   

ಮುಂಬೈ: ರೈತರ ಹಲವು ಬೇಡಿಕೆಗಳನ್ನು ಮುಂದಿರಿಸಿಕೊಂಡು ರಾಷ್ಟ್ರಪತಿ ಮಹಾತ್ಮ ಗಾಂಧಿ ಅವರ ಪುಣ್ಯತಿಥಿ ಜನವರಿ 30ರಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಘೋಷಣೆ ಮಾಡಿರುವ ಹಿರಿಯ ಸಾಮಾಜಿಕ ಕಾರ್ತಕರ್ತ ಅಣ್ಣಾ ಹಜಾರೆ ಶುಕ್ರವಾರದಂದು, ನಿಗದಿಪಡಿಸಿರುವ ಉಪವಾಸ ಸತ್ಯಾಗ್ರಹವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹಾಗೂ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿ ಅವರ ಉಪಸ್ಥಿತಿಯಲ್ಲಿ ಅಣ್ಣಾ ಹಜಾರೆ ಈ ಕುರಿತು ನಿರ್ಧಾರವನ್ನು ಪ್ರಕಟಿಸಿದರು.

ನಾನು ಬಹಳ ಸಮಯದಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆಂದೋಲನವನ್ನು ಮಾಡುತ್ತಿದ್ದೇನೆ. ಶಾಂತಿಯುತವಾಗಿ ಪ್ರತಿಭಟಿಸುವುದು ಅಪರಾಧವಲ್ಲ. ಕಳೆದ ಮೂರು ವರ್ಷಗಳಿಂದ ರೈತರ ಸಮಸ್ಯೆಗಳನ್ನು ಎತ್ತಿ ಹಿಡಿದಿದ್ದೇನೆ. ಅವರ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗದಿದ್ದರೆ ಆತ್ಮಹತ್ಯೆಗೆ ಶರಣಾಗುತ್ತಾರೆ. ಸರ್ಕಾರವು ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಶೇಕಡಾ 50ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ಬಗ್ಗೆ ನನಗೆ ಪತ್ರ ದೊರಕಿದೆ ಎಂದು ಅಣ್ಣಾ ಹಜಾರೆತಿಳಿಸಿದ್ದಾರೆ.

ADVERTISEMENT

ನಮ್ಮ ಕೆಲವು ಬೇಡಿಕೆಗಳಿಗೆ ಕೇಂದ್ರಸರ್ಕಾರ ಸಮ್ಮತಿ ಸೂಚಿಸಿದೆ. ರೈತರ ಜೀವನವನ್ನು ಸುಧಾರಿಸಲು ಸಮಿತಿ ರಚಿಸುವುದಾಗಿ ತಿಳಿಸಿದೆ. ಹಾಗಾಗಿ ನಾಳೆಯ (ಶನಿವಾರ) ಉಪವಾಸ ಸತ್ಯಾಗ್ರಹವನ್ನು ರದ್ದುಗೊಳಿಸಿದ್ದೇನೆ ಎಂದು ತಿಳಿಸಿದರು.

ಕಳೆದ ತಿಂಗಳಿನಲ್ಲಷ್ಟೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಅಣ್ಣಾ ಹಜಾರೆ, ರೈತರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಜನವರಿ ಒಳಗಾಗಿ ಬಗೆ ಹರಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎ್ಚಚರಿಸಿದ್ದರು. ಇದರಂಗವಾಗಿ ಮಹಾತ್ಮ ಗಾಂಧಿ ಪುಣ್ಯತಿಥಿಯಂದು ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ರಾಳೆಗಣಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.