ನವದೆಹಲಿ:ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶ ಮತ್ತು ಇತರ ಹಲವು ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಯು ಭಾನುವಾರವೂ ಮುಂದುವರಿದಿದೆ. ಹಿಂಸಾಚಾರದಲ್ಲಿ ಈವರೆಗೆ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಉತ್ತರ ಪ್ರದೇಶದಲ್ಲಿ ಶುಕ್ರವಾರದ ಬಳಿಕ ಏಕಾಏಕಿ ಹಿಂಸಾಚಾರ ಭುಗಿಲೆದ್ದಿತ್ತು. ಎಂಟು ವರ್ಷದ ಬಾಲಕ ಸೇರಿ 15 ಮಂದಿ ಮೃತಪಟ್ಟಿದ್ದರು. ರಾಮ್ಪುರದಲ್ಲಿ ಶನಿವಾರ ನಡೆದ ಗಲಭೆಯಲ್ಲಿ ಒಬ್ಬ ಪ್ರತಿಭಟನಾಕಾರ ಮೃತಪಟ್ಟಿದ್ದ. ಕಲ್ಲು ತೂರಾಟಗಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದರು.
ದೇಶದ ಹಲವೆಡೆ ಸೂಕ್ಷ್ಮ ಪ್ರದೇಶಗಳಲ್ಲಿ ಅಂತರ್ಜಾಲ ಸೇವೆ ಸ್ಥಗಿತಗೊಳಿಸಲಾಗಿದೆ. ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ, ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ ದೇಶದಾದ್ಯಂತ ಸುಮಾರು 7,000 ಜನರನ್ನು ವಶಕ್ಕೆ ಪಡೆಯಲಾಗಿದೆ. 705 ಮಂದಿಯನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಚೆನ್ನೈ, ದೆಹಲಿ, ಗುರುಗ್ರಾಮ, ಕೋಲ್ಕತ್ತ ಮತ್ತು ಗುವಾಹಟಿಗಳಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಹಾರದ ರಾಜಧಾನಿ ಪಟ್ನಾದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಿದ್ದಾರೆ. ಈ ವೇಳೆ, ಮೂವರು ಗುಂಡಿನ ದಾಳಿಯಿಂದ ಗಾಯಗೊಂಡಿದ್ದು, ಆರು ಮಂದಿ ಕಲ್ಲು ತೂರಾಟದಿಂದ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಮಧ್ಯೆ, ಕಾಯ್ದೆಯ ಬಗ್ಗೆ ಹರಡಿರುವ ಸುಳ್ಳುಸುದ್ದಿಗಳನ್ನು ದೂರಮಾಡಲು ಮತ್ತು, ಜನರಲ್ಲಿ ಅರಿವು ಮೂಡಿಸಲುಜಾಗೃತಿ ಅಭಿಯಾನ ಹಮ್ಮಿಕೊಳ್ಳುವುದಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.