ಲಖನೌ: ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯು ಉತ್ತರ ಪ್ರದೇಶದಲ್ಲಿ ಭಾರಿ ಹಿಂಸಾಚಾರಕ್ಕೆ ಕಾರಣವಾಗಿದೆ. ಶುಕ್ರವಾರ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಆರು ಮಂದಿ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐದು ಮಂದಿಯ ಸಾವನ್ನು ರಾಜ್ಯ ಪೊಲೀಸ್ ಮುಖ್ಯಸ್ಥರು ದೃಢೀಕರಿಸಿದ್ದಾರೆ.ಸಾವಿಗೆ ಕಾರಣವೇನು ಎಂಬುದು ಮರಣೋತ್ತರ ಪರೀಕ್ಷೆಯ ನಂತರವಷ್ಟೇ ತಿಳಿಯಬೇಕಿದೆ ಎಂದು ತಿಳಿಸಿದ್ದಾರೆ.
ಬಿಜ್ನೋರ್ನಲ್ಲಿ ಇಬ್ಬರು ಮತ್ತು ಮೀರಠ್, ಸಂಭಲ್ ಮತ್ತು ಫಿರೋಜಾಬಾದ್ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮಹಾ ನಿರ್ದೇಶಕ ಒ.ಪಿ. ಸಿಂಗ್ ತಿಳಿಸಿದ್ದಾರೆ. ಪೊಲೀಸರು ಶುಕ್ರವಾರ ಒಂದು ಗುಂಡನ್ನೂ ಹಾರಿಸಿಲ್ಲ. ಹಾಗಾಗಿ, ಇವರಲ್ಲಿ ಯಾರೂ ಪೊಲೀಸ್ ಗುಂಡೇಟಿಗೆ ಬಲಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಕಾನ್ಪುರದಲ್ಲಿಯೂ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾಜ್ಯದಹಲವು ಭಾಗಗಳಲ್ಲಿ ಶುಕ್ರವಾರ ಪ್ರತಿಭಟನೆ ನಡೆದಿದೆ. ಪೊಲೀಸರ ಮೇಲೆ ಪ್ರತಿಭಟನಕಾರರು ಗುಂಡು ಹಾರಿಸಿದ ಪ್ರಕರಣಗಳೂ ನಡೆದಿವೆ. ಪೊಲೀಸರು ರಬ್ಬರ್ ಗುಂಡು ಹಾರಿಸಿದ್ದಾರೆ. ಕೆಲವೆಡೆ ಅಶ್ರುವಾಯು ಶೆಲ್ ಸಿಡಿಸಿದ್ದಾರೆ. 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.