ADVERTISEMENT

ಉತ್ತರ ಪ್ರದೇಶ|ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ; ಜೀವ ಕಳೆದುಕೊಂಡವರು 22 ಮಂದಿ

ಪಿಟಿಐ
Published 18 ಫೆಬ್ರುವರಿ 2020, 2:16 IST
Last Updated 18 ಫೆಬ್ರುವರಿ 2020, 2:16 IST
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಲಖನೌನಲ್ಲಿ ನಡೆದ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಲಖನೌನಲ್ಲಿ ನಡೆದ ಪ್ರತಿಭಟನೆ    

ಅಲಹಾಬಾದ್:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ 2019 ಡಿಸೆಂಬರ್20 ಮತ್ತು 21ರಂದು ನಡೆದ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 22 ಮಂದಿ ಜೀವ ಕಳೆದುಕೊಂಡಿದ್ದಾರೆ. 83 ಮಂದಿಗೆ ಗಾಯಗಳಾಗಿವೆ ಎಂದು ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್ ಹೈಕೋರ್ಟ್‌ನಲ್ಲಿ ಹೇಳಿದೆ.

ಸೋಮವಾರಮುಖ್ಯನ್ಯಾಯಮೂರ್ತಿ ಗೋವಿಂದ್ ಮಾಥುರ್ ಮತ್ತು ನ್ಯಾಯಮೂರ್ತಿ ಸಿದ್ದಾರ್ಥ ಅವರ ನ್ಯಾಯಪೀಠದ ಮುಂದೆ ಉತ್ತರ ಪ್ರದೇಶ ಸರ್ಕಾರದ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ನ್ಯಾಯವಾದಿ ಮನೀಷ್ ಗೋಯೆಲ್, ಸಾರ್ವಜನಿಕ ಆಸ್ತಿಗಳನ್ನು ನಾಶ ಮಾಡಿದ್ದಕ್ಕೆ ಮತ್ತು ಗಲಭೆ ಸೃಷ್ಟಿಸಿದ 883 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರ ಪೈಕಿ 561 ಮಂದಿ ಜಾಮೀನು ಪಡೆದು ಹೊರಬಂದಿದ್ದಾರೆ . 322 ಮಂದಿ ಇನ್ನೂ ಜೈಲಿನಲ್ಲಿದ್ದಾರೆ. 111 ಮಂದಿ ಸಲ್ಲಿಸಿದ ಜಾಮೀನು ಅರ್ಜಿ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದೆ ಎಂದಿದ್ದಾರೆ.

ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ 45 ಪೊಲೀಸ್ ಮತ್ತು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಹಲವರಿಗೆ ಗಾಯಗಳಾಗಿವೆ. ಅವರೆಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಪೊಲೀಸರ ವಿರುದ್ಧ 10 ದೂರುಗಳು ದಾಖಲಾಗಿದ್ದು ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದಿದ್ದಾರೆ.

ಉತ್ತರ ಪ್ರದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮಾರ್ಚ್ 18ಕ್ಕೆ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ.

ಈ ಬಗ್ಗೆ ಅರ್ಜಿದಾರರು ಮತ್ತು ರಾಜ್ಯ ಸರ್ಕಾರ ತಮ್ಮ ಅಫಿಡವಿಟ್ ಮತ್ತು ದಾಖಲೆಗಳನ್ನು ಸಲ್ಲಿಸುವಂತೆ ನ್ಯಾಯಪೀಠ ಆದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.