ADVERTISEMENT

ಮತಾಂತರ ನಿಷೇಧ ಕಾಯ್ದೆ | ಕೇಂದ್ರ ಹಾಗೂ 12 ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನೋಟಿಸ್‌

ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಎನ್‌ಸಿಸಿಐಯಿಂದ ಅರ್ಜಿ

ಪಿಟಿಐ
Published 2 ಫೆಬ್ರುವರಿ 2026, 14:08 IST
Last Updated 2 ಫೆಬ್ರುವರಿ 2026, 14:08 IST
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್   

ನವದೆಹಲಿ: ಮತಾಂತರ ನಿಷೇಧ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿ ಭಾರತದ ಚರ್ಚ್‌ಗಳ ರಾಷ್ಟ್ರೀಯ ಮಂಡಳಿ (ಎನ್‌ಸಿಸಿಐ) ಸಲ್ಲಿಸಿದ ಹೊಸ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಹಾಗೂ ಕರ್ನಾಟಕ, ರಾಜಸ್ಥಾನ, ಅರುಣಾಚಲ ಪ್ರದೇಶ ಸೇರಿದಂತೆ 12 ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ ಸೋಮವಾರ ನೋಟಿಸ್‌ ಜಾರಿಗೊಳಿಸಿದೆ.

ಎನ್‌ಸಿಸಿಐ ಪರ ಹಾಜರಾಗಿದ್ದ ಹಿರಿಯ ವಕೀಲೆ ಮೀನಾಕ್ಷಿ ಅರೋರಾ, ‘ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾನೂನಿಗೆ ಕೂಡಲೇ ತಡೆಯಾಜ್ಞೆ ನೀಡಬೇಕು’ ಎಂದು ಕೋರಿದರು.

ಎನ್‌ಸಿಸಿಐ ಸಲ್ಲಿಸಿದ ವರದಿಗಳನ್ನು ಪರಿಗಣಿಸಿದ‌ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ನ್ಯಾ.ಜಾಯ್‌ಮಾಲ್ಯ ಬಾಗ್ಚಿ ನೇತೃತ್ವದ ನ್ಯಾಯಪೀಠ, ನಾಲ್ಕು ವಾರಗಳ ಒಳಗಾಗಿ ವರದಿ ಸಲ್ಲಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿತು. 

ADVERTISEMENT

ಈಗಾಗಲೇ ಸಲ್ಲಿಸಿರುವ ಒಂದು ಅರ್ಜಿಯ ಜೊತೆಗೆ ಹೊಸತಾಗಿ ಸಲ್ಲಿಸಿರುವ ಅರ್ಜಿಗಳ ಜೊತೆಗೆ ಮೂವರು ನ್ಯಾಯಮೂರ್ತಿಗಳನ್ನು ಒಳಗೊಂಡ ನ್ಯಾಯಪೀಠವು ಒಟ್ಟಾಗಿ ಈ ಅರ್ಜಿಗಳನ್ನು ಪರಿಗಣಿಸಲಿದೆ ಎಂದು ಸಿಜೆಐ ತಿಳಿಸಿದರು.

ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ರಾಜ್ಯಗಳ ಕಾನೂನುಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯು ಬಾಕಿಯಿದೆ. ಉತ್ತರ ಸಿದ್ಧವಿದ್ದು, ಶೀಘ್ರದಲ್ಲಿಯೇ ಸಲ್ಲಿಸಲಾಗುವುದು’ ಎಂದು ನ್ಯಾಯಪೀಠದ ಗಮನಸೆಳೆದರು.

ಇದಕ್ಕೆ ಉತ್ತರಿಸಿದ ಮೀನಾಕ್ಷಿ ಅರೋರಾ, ‘ಒಡಿಶಾ ಹಾಗೂ ರಾಜಸ್ಥಾನವು ಹೊಸತಾಗಿ ಕಾನೂನು ರಚಿಸಿವೆ. ಈ ಹಿಂದೆ ಸಲ್ಲಿಸಿದ ಅರ್ಜಿಯಲ್ಲಿ ಅದನ್ನು ಪ್ರಶ್ನಿಸಿರಲಿಲ್ಲ’ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಮಾತ್ರವಲ್ಲದೇ, ಕರ್ನಾಟಕ, ರಾಜಸ್ಥಾನ, ಉತ್ತರ ಪ್ರದೇಶ, ಒಡಿಶಾ, ಛತ್ತೀಸಗಢ, ಅರುಣಾಚಲ ಪ್ರದೇಶ, ಗುಜರಾತ್‌, ಜಾರ್ಖಂಡ್‌, ಉತ್ತರಾಖಂಡ, ಹರಿಯಾಣ, ಮಧ್ಯಪ್ರದೇಶ ಹಾಗೂ ಹಿಮಾಚಲ ಪ್ರದೇಶಕ್ಕೆ ನೋಟಿಸ್‌ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.