ADVERTISEMENT

ಅರಾವಳಿ ವಿವಾದ | ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ 'ಸುಪ್ರೀಂ': ವಿಚಾರಣೆ ಇಂದು

ಪಿಟಿಐ
Published 29 ಡಿಸೆಂಬರ್ 2025, 2:14 IST
Last Updated 29 ಡಿಸೆಂಬರ್ 2025, 2:14 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಬಗೆಗಿನ ಮರುವ್ಯಾಖ್ಯಾನ ಕುರಿತು ಆಕ್ಷೇ‌ಪ ವ್ಯಕ್ತವಾಗಿರುವ ಕಾರಣ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್‌ ಈ ಬಗ್ಗೆ ಸೋಮವಾರ ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ ಸೂರ್ಯ ಕಾಂತ್‌ ಹಾಗೂ ನ್ಯಾಯಮೂರ್ತಿಗಳಾದ ಜೆ.ಕೆ ಮಾಹೇಶ್ವರಿ ಮತ್ತು ಅಗಸ್ಟಿನ್‌ ಜಾರ್ಜ್‌ ಮಸೀಹ್‌ ಅವರನ್ನೊಳಗೊಂಡ ರಜಾ ಕಾಲದ ಪೀಠವು ಪ್ರಕರಣದ ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಸಂರಕ್ಷಣೆಗಾಗಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸಮಿತಿ ನೀಡಿದ್ದ ಏಕರೂಪದ ವ್ಯಾಖ್ಯಾನವನ್ನು ಸುಪ್ರೀಂ ಕೋರ್ಟ್‌ ನವೆಂಬರ್ 20ರಂದು ಅನುಮೋದಿಸಿತ್ತು. ತಜ್ಞರು ವರದಿ ಸಲ್ಲಿಸಿದ ನಂತರ ಹರಿಯಾಣ, ರಾಜಸ್ಥಾನ ಮತ್ತು ಗುಜರಾತ್‌ ರಾಜ್ಯಗಳಲ್ಲಿ ಹೊಸದಾಗಿ ಗಣಿಗಾರಿಕೆ ಕೈಗೊಳ್ಳಲು ಅನುಮತಿ ನೀಡುವುದನ್ನು ಇದೇ ವೇಳೆ ನಿರ್ಬಂಧಿಸಿತ್ತು.

ADVERTISEMENT

ರಾಜಸ್ಥಾನ, ಗುಜರಾತ್‌, ಹರಿಯಾಣದಲ್ಲಿರುವ ಅರಾವಳಿ ಜಿಲ್ಲೆಗಳಲ್ಲಿನ ನೂರು ಮೀಟರ್ ಮತ್ತು ಅದಕ್ಕಿಂತ ಎತ್ತರದ ಭೂಪ್ರದೇಶಗಳನ್ನು ಅರಾವಳಿ ಬೆಟ್ಟಗಳು ಮತ್ತು 500 ಮೀಟರ್‌ ಅಂತರದಲ್ಲಿರುವ ಎರಡು ಅಥವಾ ಅದಕ್ಕಿಂತ ಹೆಚ್ಚಿನ ಬೆಟ್ಟಗಳನ್ನು ಅರಾವಳಿ ಶ್ರೇಣಿಗಳೆಂದು ಪರಿಗಣಿಸಬೇಕು ಎಂದು ಸಮಿತಿ ಶಿಫಾರಸು ಮಾಡಿತ್ತು.

ಈ ಮರುವ್ಯಾಖ್ಯಾನದಿಂದಾಗಿ ಅರಾವಳಿ ವ್ಯಾಪ್ತಿಯ ನೂರು ಮೀಟರ್‌ಗಿಂತ ಕಡಿಮೆ ಎತ್ತರದ ಪ್ರದೇಶಗಳಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಮಾನವ ಹಸ್ತಕ್ಷೇಪ ನಡೆದು ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆಕ್ಷೇಪಿಸಿ ರಾಜಸ್ಥಾನ, ಹರಿಯಾಣ ಮತ್ತು ಗುಜರಾತ್‌ನಲ್ಲಿ ವ್ಯಾಪಕ ಪ್ರತಿಭಟನೆಗಳು ಆರಂಭಗೊಂಡಿವೆ.

ಈ ಕಾರಣಕ್ಕೆ ‘ಅರಾವಳಿ ಬೆಟ್ಟಗಳ ಮರುವ್ಯಾಖ್ಯಾನ ಕುರಿತ ವಿವಾದಗಳು’ ಎಂಬ ಶೀರ್ಷಿಕೆ ಅಡಿಯಲ್ಲಿ ಸುಪ್ರೀಂ ಕೋರ್ಟ್‌ ಪ್ರಕರಣ ದಾಖಲಿಸಿಕೊಂಡಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.