ಶ್ರೀನಗರ: ಜಮ್ಮು ಮತ್ತುಕಾಶ್ಮೀರದ ನೌಶೇರಾ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದರಿಂದ ಭಾರತದ ಯೋಧರೊಬ್ಬರು ಮೃತಪಟ್ಟಿದ್ದಾರೆ.
ಗುರುವಾರ ಮಧ್ಯರಾತ್ರಿ 12.30ರ ಸುಮಾರಿಗೆ ಕಮಾಲ್ ಪ್ರದೇಶದಲ್ಲಿ ಪಾಕಿಸ್ತಾನದ ಸೈನಿಕರು ಶೆಲ್ ಮತ್ತು ಗುಂಡಿನ ದಾಳಿ ನಡೆಸಿದರು. ಈ ವೇಳೆ ಗಂಭೀರವಾಗಿ ಗಾಯಗೊಂಡ ಹವಲ್ದಾರ್ ಎಸ್. ಗುರುಂಗ್ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಪೂಂಚ್ ಮತ್ತು ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಸೇನೆಯು ಜೂನ್ ತಿಂಗಳಿನಿಂದ ನಡೆಸಿದ ಗುಂಡಿನ ದಾಳಿಯಲ್ಲಿ ಒಟ್ಟು ಆರು ಯೋಧರು ಹುತಾತ್ಮರಾಗಿದ್ದಾರೆ.
ಬುಧವಾರಪೂಂಚ್ ಜಿಲ್ಲೆ, ಮೇಂಧರ್ ಸೆಕ್ಟರ್ ಬಳಿ ಪಾಕಿಸ್ತಾನದ ಸೈನಿಕರು ಕದನವಿರಾಮವನ್ನು ಉಲ್ಲಂಘಿಸಿ ದಾಳಿ ನಡೆಸಿದ್ದರಿಂದ 65 ವರ್ಷ ವಯಸ್ಸಿನ ಒಬ್ಬ ಮಹಿಳೆ ಮೃತಪಟ್ಟು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಇತ್ತೀಚೆಗೆ ಜಮ್ಮು–ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದೆ. ಜೂನ್ ತಿಂಗಳೊಂದರಲ್ಲೇ 410 ಬಾರಿ ಇಂತಹ ಘಟನೆಗಳು ನಡೆದಿವೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ ಪಾಕಿಸ್ತಾನ ಒಟ್ಟು 2300 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.