ಶ್ರೀನಗರ: ಸಂವಿಧಾನದ 370ನೇ ವಿಧಿಯಡಿ ಜಮ್ಮು–ಕಾಶ್ಮೀರಕ್ಕೆ ಕಲ್ಪಿಸಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರ ಸರ್ಕಾರದ ತೀರ್ಮಾನವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ, ನ್ಯಾಯಾಲಯದ ಮೊರೆ ಹೋಗಲು ಚಿಂತನೆ ನಡೆಸಿರುವುದಾಗಿ ಅವಾಮಿ ನ್ಯಾಷನಲ್ ಕಾನ್ಫರೆನ್ಸ್ (ಎಎನ್ಸಿ) ಗುರುವಾರ ತಿಳಿಸಿದೆ.
ಈ ತೀರ್ಪು ಪೂರ್ಣ ಪ್ರಮಾಣದಲ್ಲಿ ಸರಿಯಿಲ್ಲ ಎಂದು ಕಾನೂನು ತಜ್ಞರು ಹೇಳಿದ್ದಾರೆ ಎಂದು ಅದು ಹೇಳಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎನ್ಸಿಯ ಹಿರಿಯ ಉಪಾಧ್ಯಕ್ಷ ಮುಜಾಫ್ಫರ್ ಶಾ, ‘ಸುಪ್ರೀಂ ಕೋರ್ಟ್ನ ಈ ತೀರ್ಪು ಸಂಪೂರ್ಣವಾಗಿಲ್ಲ ಸರಿಯಿಲ್ಲ ಎಂದು ಕಾನೂನು ಮತ್ತು ಸಂವಿಧಾನದ ತಜ್ಞರು ಹೇಳುತ್ತಿದ್ದಾರೆ. ಹಲವು ಮೂಲಭೂತ ವಿಚಾರಗಳ ಕುರಿತು ನ್ಯಾಯಾಲಯವು ಮೌನ ವಹಿಸಿದೆ. ಈ ಕುರಿತ ಮರುಪರಿಶೀಲನಾ ಅರ್ಜಿ ಸಿದ್ಧಪಡಿಸಲಾಗುತ್ತಿದ್ದು, ಅದು ಸಿದ್ಧಗೊಂಡ ಬಳಿಕ ನಮ್ಮ ಕಾನೂನು ತಜ್ಞರು ಮತ್ತು 23 ಅರ್ಜಿದಾರರ ಜೊತೆ ಚರ್ಚಿಸುತ್ತೇವೆ. ಶೀಘ್ರದಲ್ಲೇ ಸುಪ್ರೀಂ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸುತ್ತೇವೆ’ ಎಂದಿದ್ದಾರೆ.
ಇತಿಹಾಸ ಮತ್ತು ಸಂವಿಧಾನದಲ್ಲಿ ನಂಬಿಕೆ ಉಳ್ಳವರು ಈ ಕಾನೂನು ಸಮರದಲ್ಲಿ ಒಟ್ಟಾಗಿ ನಿಲ್ಲಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ‘ಸಂವಿಧಾನದ 370ನೇ ವಿಧಿಯಡಿ ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ಸೌಲಭ್ಯವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯಲಿದೆ ಎಂಬ ವಿಶ್ವಾಸವಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.