ನವದೆಹಲಿ: ಮೂತ್ರಪಿಂಡ ಕಸಿ ಯಶಸ್ವಿ ಶಸ್ತ್ರಚಿಕಿತ್ಸೆ ಬಳಿಕ ಮೂರು ತಿಂಗಳು ಸುದೀರ್ಘ ಬಿಡುವು ಪಡೆದಿದ್ದ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಹಣಕಾಸು ಹಾಗೂ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಕ್ಕೆ ಗುರುವಾರ ಮರಳಲಿದ್ದಾರೆ.
ಈ ಬಗ್ಗೆ ರಾಷ್ಟ್ರಪತಿ ಭವನ ಮಾಹಿತಿ ನೀಡಿದ್ದು, ‘ಅರುಣ್ ಜೇಟ್ಲಿ ಅವರಿಗೆ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು ನಿಯೋಜಿಸಲು ಪ್ರಧಾನ ಮಂತ್ರಿಗಳು ಸಲಹೆ ನೀಡಿದ್ದಾರೆ’ ಎಂದು ತಿಳಿಸಿದೆ.
ಇದೇ ವರ್ಷದ ಮೇ ತಿಂಗಳಿನಲ್ಲಿ ಆಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಜೇಟ್ಲಿ ಮೂರು ವಾರಗಳ ಬಳಿಕ ಆಸ್ಪತ್ರೆಯಿಂದ ವಾಪಸ್ ಆಗಿದ್ದರು. ಕಳೆದ ಕೆಲವು ದಿನಗಳಿಂದ ಮನೆಯಿಂದಲೇ ಸಚಿವಾಲಯದ ಕೆಲಸ ನಿರ್ವಹಿಸುತ್ತಿದ್ದರು.
ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕಾಗಿ ಆಗಸ್ಟ್ 9ರಂದು ನಡೆದ ಚುನಾವಣೆಯಲ್ಲಿ ಮತದಾನ ಮಾಡಲು ಆಗಮಿಸಿದ ಜೇಟ್ಲಿಬಳಿಕ ಯಾವುದೇ ಸಾರ್ವಜನಿಕ ಸಭೆ, ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿಲ್ಲ. 2019ರ ಸಾರ್ವತ್ರಿಕ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಹೊತ್ತಿನಲ್ಲಿ ಜೇಟ್ಲಿ ಸಚಿವಾಲಯಕ್ಕೆ ಹಾಜರಾಗುತ್ತಿರುವುದುಸರ್ಕಾರಕ್ಕೆ ಬಲ ತುಂಬಲಿದೆ ಎನ್ನಲಾಗಿದೆ.
ಜೇಟ್ಲಿ ಅವರ ಅನುಪಸ್ಥಿತಿಯಲ್ಲಿ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಹೆಚ್ಚುವರಿ ಜವಾಬ್ದಾರಿ ನಿಭಾಯಿಸುತ್ತಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.