ಮುಂಬೈ: ದೆಹಲಿ ಆಡಳಿತಾತ್ಮಕ ಸೇವೆಗಳ ಮೇಲಿನ ಹಿಡಿತಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಮರ ಸಾರಿದ್ದು, ವಿಪಕ್ಷಗಳ ನಾಯಕರ ಬೆಂಬಲಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. ಇದರ ಭಾಗವಾಗಿ ಇಂದು ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶಿವಸೇನಾ(ಉದ್ಧವ್ ಠಾಕ್ರೆ ಬಣ) ನಾಯಕ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಲಿದ್ದಾರೆ.
ಭಾನುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿಯಾಗಿ ಕೇಜ್ರಿವಾಲ್ ಮಾತನಾಡಿದ್ದರು. ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಉಭಯ ರಾಜ್ಯದ ಮುಖ್ಯಮಂತ್ರಿಗಳು ಧನಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಸಂಜೆಯೇ ಮುಂಬೈಗೆ ತಲುಪಿದ ಕೇಜ್ರಿವಾಲ್, ಇಂದು ಉದ್ಧವ್ ಠಾಕ್ರೆ ಅವರನ್ನು ಮುಂಬೈನ ಅವರ ನಿವಾಸದಲ್ಲಿ ಭೇಟಿಯಾಗಲಿದ್ದಾರೆ ಎಂದು ವರಿದಿಯಾಗಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್, ‘ರಾಜ್ಯಸಭೆಯಲ್ಲಿ ಸುಗ್ರೀವಾಜ್ಞೆ ಮಸೂದೆಯನ್ನು ಕಾನೂನಾಗಿ ಪರಿವರ್ತಿಸುವ ಪ್ರಸ್ತಾವನೆ ಮತದಾನಕ್ಕೆ ಬರಲಿದೆ. ಅದು 2024ರ ಲೋಕಸಭಾ ಚುನಾವಣೆಗೆ ಸೆಮಿ ಫೈನಲ್ ಆಗಲಿದೆ‘ ಎಂದು ಹೇಳಿದರು.
ಹಿನ್ನೆಲೆ
ಅಧಿಕಾರಿಗಳ ವರ್ಗಾವಣೆ, ನಿಯೋಜನೆ ಪ್ರಕ್ರಿಯೆ ಉಸ್ತುವಾರಿಗಾಗಿ ‘ರಾಷ್ಟ್ರ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರ’ವನ್ನು ಕೇಂದ್ರ ಸರ್ಕಾರ ರಚಿಸಿದೆ. ಈ ಸಂಬಂಧ ಶುಕ್ರವಾರ ಸುಗ್ರೀವಾಜ್ಞೆ ಹೊರಡಿಸಿತ್ತು. ನವದೆಹಲಿಯಲ್ಲಿ ಸೇವಾ ವಲಯದ ಮೇಲಿನ ಅಧಿಕಾರವನ್ನು ದೆಹಲಿ ಸರ್ಕಾರದ ಸುಪರ್ದಿಗೆ ಒಪ್ಪಿಸುವ ಸುಪ್ರೀಂ ಕೋರ್ಟ್ನ ಆದೇಶ ಹೊರಬಿದ್ದ ಒಂದು ವಾರದ ನಂತರ ಪ್ರಾಧಿಕಾರವನ್ನು ರಚಿಸುವ ಸಂಬಂಧ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.