ನವದೆಹಲಿ: ರಾಜ್ಯಸಭೆಯಲ್ಲಿ ಮಂಡಿಸಲಾಗುವ ಕೃಷಿ ಮಸೂದೆಗಳ ವಿರುದ್ಧ ಮತಚಲಾಯಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಿಜೆಪಿಯೇತರ ಪಕ್ಷಗಳಿಗೆ ಮನವಿ ಮಾಡಿದ್ದಾರೆ.
‘ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯರ ಸಂಖ್ಯೆ ಕಡಿಮೆ ಇದೆ. ಬಿಜೆಪಿಯೇತರ ಪಕ್ಷಗಳು ಒಗ್ಗಟ್ಟಾಗಿ, ರಾಜ್ಯಸಭೆಯಲ್ಲಿ ಈ ರೈತ ವಿರೋಧಿ ಮಸೂದೆಗಳನ್ನು ಸೋಲಿಸಬೇಕು. ಇದು ದೇಶದ ಬಹುಪಾಲು ರೈತರ ಆಶಯವೂ ಆಗಿದೆ‘ ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಕೇಜ್ರಿವಾಲ್ ಅವರುಇದಕ್ಕೂ ಮೊದಲು ‘ಈ ಮಸೂದೆಗಳು ರೈತ ವಿರೋಧಿಯಾಗಿದ್ದು, ನಮ್ಮ ಪಕ್ಷ ಈ ಮಸೂದೆಗಳ ವಿರುದ್ಧ ಮತ ಚಲಾಯಿಸಲಿದೆ‘ ಎಂದು ಹೇಳಿದ್ದರು. ಲೋಕಸಭೆಯಲ್ಲಿ ಅಂಗೀಕಾರ ದೊರೆಯುವುದಕ್ಕೂ ಮುನ್ನ ಈ ಮಸೂದೆಗಳನ್ನು ಹಿಂದಕ್ಕೆ ಪಡೆಯಬೇಕೆಂದು ಸರ್ಕಾರವನ್ನು ಅವರು ಒತ್ತಾಯಿಸಿದ್ದರು.
ಪ್ರಸ್ತುತ ಲೋಕಸಭೆಯಲ್ಲಿ ಒಬ್ಬರು ಮತ್ತು ರಾಜ್ಯಸಭೆಯಲ್ಲಿ ಮೂವರು ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಾರ್ಟಿಯ ಸದಸ್ಯರಿದ್ದಾರೆ.
ಗುರುವಾರ ಲೋಕಸಭೆಯಲ್ಲಿಎನ್ಡಿಎ ಮೈತ್ರಿ ಪಕ್ಷ ಶಿರೋಮಣಿ ಅಕಾಲಿ ದಳ (ಎಸ್ಎಡಿ) ಹಾಗೂ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ, ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ (ಸಬಲೀಕರಣ ಮತ್ತು ರಕ್ಷಣೆ) ಮಸೂದೆಗಳನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.