ನವದೆಹಲಿ:ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಹಾಗೂ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸಚಿನ್ ಪೈಲಟ್ಅವರನ್ನು ಕಾಂಗ್ರೆಸ್ ಹೈ ಕಮಾಂಡ್ ಗುರುವಾರ ಆಯ್ಕೆ ಮಾಡಿದೆ.
ಚುನಾವಣೆ ಫಲಿತಾಂಶ ಹೊರ ಬಿದ್ದು, ಎರಡು ದಿನ ಕಳೆದರೂ ಸಿಎಂ ಅಭ್ಯರ್ಥಿಯನ್ನು ಅಂತಿಮ ಗೊಳಿಸಿರಲಿಲ್ಲ. ಆಯ್ಕೆ ಕಸರತ್ತು ನಡೆದೇ ಇತ್ತು.
‘ರಾಜಸ್ಥಾನ ಸಿಎಂ ಆಗಿ ಅಶೋಕ್ ಗೆಹ್ಲೋಟ್ ಮತ್ತು ಡಿಸಿಎಂ ಆಗಿ ಸಚಿನ್ ಪೈಲಟ್ ಅವರನ್ನು ನೇಮಿಸಲು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರು ನಿರ್ಧರಿಸಿದ್ದಾರೆ’ ಎಂದು ಕಾಂಗ್ರೆಸ್ನ ರಾಜಸ್ಥಾನ ವೀಕ್ಷಕ ಕೆ.ಸಿ.ವೇಣುಗೋಪಾಲ್ ಅವರು ನಾಯಕರ ಆಯ್ಕೆಯನ್ನು ಪಕ್ಷದ ಕಚೇರಿಯಲ್ಲಿ ಘೋಷಿಸಿದರು.
ಇಂದು ರಾಜ್ಯಪಾಲರನ್ನು ಭೇಟಿ ಮಾಡಲಿದ್ದೇವೆ. ಬಳಿಕ, ಪ್ರಮಾಣ ವಚನ ಸ್ವೀಕಾರ ಸಮಾಂಭದ ಬಗ್ಗೆ ನಿರ್ಧರಿಸಲಿದ್ದೇವೆ ಎಂದು ವೇಣುಗೋಪಾಲ್ ತಿಳಿಸಿದರು.
ಮುಖ್ಯಂಮತ್ರಿ ಸ್ಥಾನಕ್ಕೆ ಅಶೋಕ್ ಗೆಹ್ಲೋಟ್ ಅವರನ್ನು ಆಯ್ಕೆ ಮಾಡಿ ನಿರ್ಧಾರ ಕೈಗೊಂಡಿರುವ ಪಕ್ಷದ ಅಧ್ಯಕ್ಷರಾದ ರಾಹುಲ್ ಗಾಂಧಿ ಮತ್ತು ಹಿರಿಯ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗಿರುವ ಸಚಿನ್ ಪೈಲಟ್ ಹೇಳಿದ್ದಾರೆ.
‘ಕಾಂಗ್ರೆಸ್ನ ಅಗ್ರಮಾನ್ಯರು ರಾಜಸ್ಥಾನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪ್ರಜಾಪ್ರಭುತ್ವ ಮೌಲ್ಯಗಳೊಂದಿಗೆ ಪ್ರಾಮಾಣಿಕತೆ ಮತ್ತು ಬದ್ಧತೆಯೊಂದಿಗೆ ಕಾರ್ಯನಿರ್ವಹಿಸಲಿದ್ದಾರೆ’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಯುವ ಮತ್ತು ಸಮರ್ಪಣಾ ಭಾವದ ನಾಯಕ ರಾಜಸ್ಥಾನ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಸಚಿನ್ ಪೈಲಟ್ ಅವರಿಗೆ ಶುಭಾಶಯಗಳು. ಅವರು ರಾಜಸ್ಥಾನದ ಜನರಿಗೆ ಅಭಿವೃದ್ಧಿ ಮತ್ತು ಶಾಂತಿ ಮತ್ತು ಸಂತೋಷವನ್ನು ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ಮಾಡಿದೆ.
ಸಿಎಂ ಸ್ಥಾನದ ರೇಸ್ನಲ್ಲಿದ್ದ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸಚಿನ್ ಪೈಲಟ್ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಪ್ರತ್ಯೇಕ ಸಭೆ ನಡೆಸಿದ್ದರು.
ಗೆಹ್ಲೋಟ್ ಹಾಗೂ ಪೈಲಟ್ಇಬ್ಬರೂ ನಾಯಕರು ಮುಖ್ಯಮಂತ್ರಿ ಹುದ್ದೆಯ ಬೇಡಿಕೆ ಇಟ್ಟಿದ್ದರು. ರಾಜಸ್ಥಾನ ಚುನಾವಣಾ ಉಸ್ತುವಾರಿ ಅವಿನಾಶ್ ಪಾಂಡೆ ಹಾಗೂ ಕೆ.ಸಿ. ವೇಣುಗೋಪಾಲ್ ಅವರೊಂದಿಗೂ ರಾಹುಲ್ ಮಾತುಕತೆ ನಡೆಸಿದ್ದರು. ಸೋನಿಯಾ ಗಾಂಧಿ, ಪ್ರಿಯಾಂಕ ವದ್ರಾ ಸಹ ರಾಹುಲ್ ಜೊತೆಗೆ ಸಮಾಲೋಚನೆ ನಡೆಸಿದ್ದರು.
ರಾಹುಲ್ ಭೇಟಿಯ ನಂತರ ಸಚಿನ್ ಪೈಲಟ್ ಜೈಪುರಕ್ಕೆ ತೆರಳಿದರು. ಆದರೆ ಅಶೋಕ್ ಗೆಹ್ಲೋಟ್ ಅವರನ್ನು ದೆಹಲಿ ವಿಮಾನ ನಿಲ್ದಾಣದಿಂದ ರಾಹುಲ್ ಗಾಂಧಿ ವಾಪಸ್ ಕರೆಸಿಕೊಂಡಿದ್ದರು.
ಈ ನಡುವೆಸಚಿನ್ ಪೈಲಟ್ ಮತ್ತು ಅಶೋಕ್ ಗೆಹ್ಲಟ್ ಮನೆಗಳ ಎದುರು ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿಗುಂಪುಗೂಡಿದ್ದರಿಂದ ಇಬ್ಬರೂ ನಾಯಕರು ತಮ್ಮ ಬೆಂಬಲಿಗರಿಗೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದ್ದರು. ಸಂಭಾವ್ಯ ಹಿಂಸಾಚಾರ ತಡೆಯಲು ರಾಜ್ಯದಾದ್ಯಂತ ಭದ್ರತೆ ಹೆಚ್ಚಿಸಲಾಗಿತ್ತು.
ಸಿಎಂ ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆ ಜೈಪುರದಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಂಭ್ರಮಾಚರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.