ಬಂಧನ
ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಹಾಗೂ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಅಲಿ ಖಾನ್ ಮೊಹಮ್ಮದ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು.
‘ಕರ್ನಲ್ ಸೋಫಿಯಾ ಅವರನ್ನು ಶ್ಲಾಘಿಸುವ ಬಲಪಂಥೀಯ ಜನರು, ಗುಂಪು ಹಲ್ಲೆಗಳು ಹಾಗೂ ಬುಲ್ಡೋಜರ್ ಕ್ರಮದ ಸಂತ್ರಸ್ತರಿಗೆ ರಕ್ಷಣೆ ನೀಡುವಂತೆಯೂ ಒತ್ತಾಯಿಸಬೇಕು’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಮೇ 7ರಂದು ಖಾನ್ ಪೋಸ್ಟ್ ಮಾಡಿದ್ದರು.
‘ಇಬ್ಬರೂ ಅಧಿಕಾರಿಗಳು ‘ಆಪರೇಷನ್ ಸಿಂಧೂರ’ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವುದು ವಾಸ್ತವದಲ್ಲಿಯೂ ಸಾಧ್ಯವಾಗಬೇಕು. ಇಲ್ಲದಿದ್ದರೆ ಅದು ಕೇವಲ ಬೂಟಾಟಿಕೆಯಾಗುತ್ತದೆ’ ಎಂದೂ ಹೇಳಿದ್ದರು.
ಅಲಿ ಖಾನ್ ಅವರ ಹೇಳಿಕೆಯನ್ನು ಖಂಡಿಸಿ ಹರ್ಯಾಣ ರಾಜ್ಯ ಮಹಿಳಾ ಆಯೋಗವು ಮೇ 12ರಂದು ಅವರಿಗೆ ನೋಟಿಸ್ ನೀಡಿತ್ತು. ಮಹಿಳಾ ಅಧಿಕಾರಿಗಳು, ದೇಶದ ಸಶಸ್ತ್ರ ಪಡೆಗಳ ವಿರುದ್ಧ ಈ ರೀತಿಯ ಹೇಳಿಕೆ ನೀಡುವುದು ಕಳವಳಕಾರಿಯಾಗಿದೆ ಎಂದು ಹೇಳಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ್ದ ಖಾನ್ ‘ಮಹಿಳಾ ಆಯೋಗವು ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿ, ನನ್ನ ಹೇಳಿಕೆಯನ್ನು ತಪ್ಪಾಗಿ ಓದಿ, ಅರ್ಥೈಸಿಕೊಂಡಿದೆ. ನನ್ನ ಹೇಳಿಕೆಯನ್ನು ಅದು ಸಂಪೂರ್ಣವಾಗಿ ತಲೆಕೆಳಗಾಗಿಸಿದೆ’ ಎಂದು ಹೇಳಿದ್ದರು.
‘ಶಾಂತಿ ಮತ್ತು ಸೌಹಾರ್ದತೆಯನ್ನು ಉತ್ತೇಜಿಸಲು ಹಾಗೂ ಸಶಸ್ತ್ರ ಪಡೆಗಳನ್ನು ಶ್ಲಾಘಿಸಲು ನನ್ನ ವಾಕ್ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಚಲಾಯಿಸಿದ್ದೇನೆ. ದೇಶವನ್ನು ಅಸ್ಥಿರಗೊಳಿಸಲು ಮತ್ತು ದ್ವೇಷ ಹರಡಲು ಯತ್ನಿಸುವವರು ನನ್ನ ಹೇಳಿಕೆಯನ್ನು ಟೀಕಿಸುತ್ತಿದ್ದಾರೆ’ ಎಂದಿದ್ದರು.
ಖಾನ್ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ದಾಖಲಿಸಿತ್ತು.
‘ಪ್ರೊಫೆಸರ್ ಅಲಿ ಖಾನ್ ಅವರನ್ನು ಪೊಲೀಸರು ಬಂಧಿಸಿರುವ ವಿಷಯ ತಿಳಿಯಿತು. ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಪಡೆಯುತ್ತಿದ್ದೇವೆ. ತನಿಖೆಯಲ್ಲಿ ಪೊಲೀಸರಿಗೆ ನಾವು ಸಹಕಾರ ನೀಡುತ್ತೇವೆ’ ಎಂದು ಅಶೋಕ ವಿಶ್ವವಿದ್ಯಾಲಯ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.