ನವದೆಹಲಿ: ಅಸ್ಸಾಂ ಮುಂದಿನ ಮುಖ್ಯಮಂತ್ರಿ ಕುರಿತು ಎದ್ದಿರುವ ಊಹಾಪೋಹಗಳ ನಡುವೆ ರಾಜ್ಯದ ಹಿರಿಯ ಬಿಜೆಪಿ ಮುಖಂಡ ಹಿಮಂತ ಬಿಸ್ವಾ ಶರ್ಮಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಶನಿವಾರ ಇಲ್ಲಿ ಭೇಟಿಯಾದರು.
ಅಸ್ಸಾಂನ ಮುಂದಿನ ಸರ್ಕಾರದ ನಾಯಕತ್ವ ವಿಚಾರ ಕುರಿತು ಚರ್ಚಿಸಲು ಬಿಜೆಪಿಯ ರಾಷ್ಟ್ರೀಯ ನಾಯಕರು ಬಿಜೆಪಿ ನಾಯಕರಾದ ಸರ್ವಾನಂದ ಸೋನೊವಾಲ್ ಮತ್ತು ಹಿಮಂತ ಶರ್ಮಾ ಅವರನ್ನು ದೆಹಲಿಗೆ ಬರುವಂತೆ ಶುಕ್ರವಾರ ತಿಳಿಸಿದ್ದರು.
ಹಿರಿಯ ನಾಯಕರ ಸೂಚನೆ ಮೇರೆಗೆ, ಈ ಉಭಯ ನಾಯಕರು ಶನಿವಾರ ಬೆಳಿಗ್ಗೆಯೇ ದೆಹಲಿ ತಲುಪಿದ್ದರೂ, ಮೊದಲಿಗೆ ಹಿಮಂತ ಶರ್ಮಾ ಅವರು ಜೆ.ಪಿ. ನಡ್ಡಾ ಅವರನ್ನು ಅವರ ನಿವಾಸದಲ್ಲೇ ಭೇಟಿಯಾಗಿ ನಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾದರು ಎಂದು ಮೂಲಗಳು ತಿಳಿಸಿವೆ. ನಂತರ ಶರ್ಮಾ ಅವರು, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ.
ಸರ್ವಾನಂದ ಸೋನಾವಾಲ್ ಕೂಡ ಶನಿವಾರ ಬಿಜೆಪಿಯ ಉನ್ನತ ನಾಯಕರನ್ನು ಭೇಟಿಯಾಗಲಿದ್ದಾರೆ. ನಡ್ಡಾ ಅವರ ನಿವಾಸಕ್ಕೂ ಹೋಗುವ ನಿರೀಕ್ಷೆ ಇದೆ. ಏಕೆಂದರೆ, ಅಲ್ಲೇ ಮುಂದಿನ ಅಸ್ಸಾಂ ಮುಖ್ಯಮಂತ್ರಿ ಯಾರು ಆಗಬೇಕೆಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯೂ ಇದೆ.
ಅಸ್ಸಾಂನ ಉಭಯ ನಾಯಕರು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿಯ ಉನ್ನತ ಮಟ್ಟದ ನಾಯಕರೊಂದಿಗೆ ನಡೆಯುವ ಈ ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭಾಗವಹಿಸುತ್ತಾರೆಯೇ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಮೂಲಗಳು ತಿಳಿಸಿವೆ.
ಅಸ್ಸಾಂನ ಸ್ಥಳೀಯ ಸೋನೊವಾಲ್-ಕಚಾರಿ ಬುಡಕಟ್ಟು ಜನಾಂಗಕ್ಕೆ ಸೇರಿದ ಸರ್ವಾನಂದ ಸೋನೊವಾಲ್ ಮತ್ತು ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಂಚಾಲಕ ಹಿಮಂತ ಶರ್ಮಾ, ಈ ಇಬ್ಬರೂ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಗಾದಿಯನ್ನು ಏರುವುದಕ್ಕಾಗಿ ಸ್ಪರ್ಧೆಯಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.