ಗುವಾಹಟಿ: ಅಸ್ಸಾಂನಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಆರು ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಮಳೆಯ ಪ್ರಮಾಣ ಕಡಿಮೆಯಾದರೂ 2.6 ಲಕ್ಷ ಜನ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯದ ಪ್ರಾಕೃತಿಕ ವಿಕೋಪ ನಿಯಂತ್ರಣ ಮಂಡಳಿಯ(ಎಎಸ್ಡಿಎಮ್ಎ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೂಡ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ರಾಜ್ಯದಲ್ಲಿ ಮಳೆಯು ಮುಂದುವರೆಯದೇ ಇದ್ದರೆ ಬಹುಪಾಲು ಕಡೆಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ ಎಂದಿದ್ದಾರೆ.
ಪ್ರವಾಹದಿಂದಾಗಿ ಕಾಮರೂಪ ಜಿಲ್ಲೆಯಲ್ಲಿ ಶನಿವಾರ ಮೂವರು ಮೃತಪಟ್ಟಿದ್ದಾರೆ. ಈ ವರ್ಷ ಭೂಕುಸಿತ ಹಾಗೂ ಪ್ರವಾಹದಿಂದ ಒಟ್ಟು 26 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಭಾರಿ ಮಳೆಯಿಂದಾಗಿ ಅಸ್ಸಾಂನ ಸ್ರಿಭೂಮಿ, ಹೈಲಾಕಂಡಿ ಹಾಗೂ ಕಚಾರ್ ಜಿಲ್ಲೆಗಳಲ್ಲಿ ಕ್ರಮವಾಗಿ 1.62 ಲಕ್ಷ, 52 ಸಾವಿರ ಹಾಗೂ 36 ಸಾವಿರ ಜನ ನಿರಾಶ್ರಿತರಾಗಿದ್ದರೆ. ಸರ್ಕಾರವು ನಾಲ್ಕು ಜಿಲ್ಲೆಗಳಲ್ಲಿ 130 ಪರಿಹಾರ ಕೇಂದ್ರಗಳನ್ನು ತೆರದಿದ್ದು, 24,908 ಜನ ನಿರಾಶ್ರಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಭಾರಿ ಮಳೆಯಿಂದಾಗಿ 741 ಜಿಲ್ಲೆಗಳು ಜಲಾವೃತಗೊಂಡಿದ್ದು, 6,311.17 ಹೆಕ್ಟೇರ್ ಕೃಷಿ ನಾಶವಾಗಿದೆ. ರಸ್ತೆ, ಸೇತುವೆ ಹಾಗೂ ಕಟ್ಟಡಗಳು ಕೂಡ ಹಾನಿಗೊಳಗಾಗಿವೆ. ಕಳೆದ 24 ಗಂಟೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಯಾವುದೇ ನದಿಗಳು ಕೂಡ ಅಪಾಯದ ಮಟ್ಟ ಮೀರಿ ಹರಿಯುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.