ADVERTISEMENT

36,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕೂಟರ್ ನೀಡಲು ಅಸ್ಸಾಂ ಸರ್ಕಾರ ನಿರ್ಧಾರ

ಪಿಟಿಐ
Published 20 ಅಕ್ಟೋಬರ್ 2022, 3:16 IST
Last Updated 20 ಅಕ್ಟೋಬರ್ 2022, 3:16 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಗುವಾಹಟಿ: ಅಸ್ಸಾಂ ಸರ್ಕಾರವು ಈ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸುಮಾರು 36,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಪ್ರಮುಖವಾಗಿ ವಿದ್ಯಾರ್ಥಿನಿಯರಿಗೆ ಸ್ಕೂಟರ್‌ಗಳನ್ನು ವಿತರಿಸಲಿದೆ.

₹258.9 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಬುಧವಾರ ಅಂಗೀಕರಿಸಿದೆ ಎಂದು ಶಿಕ್ಷಣ ಸಚಿವ ರನೋಜ್ ಹೇಳಿದ್ದಾರೆ.

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ 29,748 ವಿದ್ಯಾರ್ಥಿನಿಯರು ಮತ್ತು ಶೇಕಡಾ 75 ಅಂಕಗಳನ್ನು ಪಡೆದ 6,052 ವಿದ್ಯಾರ್ಥಿಗಳು ಸೇರಿ ಒಟ್ಟು ಒಟ್ಟು 35,800 ವಿದ್ಯಾರ್ಥಿಗಳು ಸ್ಕೂಟರ್‌ಗಳನ್ನು ಪಡೆಯಲಿದ್ದಾರೆ ಎಂದು ಅವರು ಹೇಳಿದರು.

ADVERTISEMENT

ಅಲ್ಲದೆ, ಉನ್ನತ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ದಾಖಲಾತಿ ಮತ್ತು ವಿಮೆಗಾಗಿ ಆರ್ಥಿಕ ನೆರವು ನೀಡುತ್ತದೆ ಎಂದು ಅವರು ಹೇಳಿದರು. ಪ್ರಾಂತೀಯ ಕಾಲೇಜುಗಳಲ್ಲಿ ನಿಗದಿತ ವೇತನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಪ್ರಾಧ್ಯಾಪಕರ ಮಾಸಿಕ ಸಂಭಾವನೆಯನ್ನು ₹55,000ಗೆ ಹೆಚ್ಚಿಸಲು ಸಂಪುಟ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದರು.

ಬಯಲು ಸೀಮೆಯ ಬುಡಕಟ್ಟು ಜನಾಂಗದವರಿಗೆ ಮತ್ತು ಪರ್ವತ ಪ್ರದೆಶದಲ್ಲಿರುವ ಬುಡಕಟ್ಟು ಜನಾಂಗದವರಿಗೆ ಪ್ರಮಾಣಪತ್ರ ನೀಡುವ ಮಾರ್ಗಸೂಚಿಗಳನ್ನು ಸಂಪುಟ ನಿರ್ಧರಿಸಿದೆ ಎಂದು ಪ್ರವಾಸೋದ್ಯಮ ಸಚಿವ ಜಯಂತ ಮಲ್ಲ ಬರುವಾ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ನೀಡುವ ಆರ್ಥಿಕ, ಶೈಕ್ಷಣಿಕ ಮತ್ತು ಉದ್ಯೋಗ ಸವಲತ್ತುಗಳನ್ನು ಪಡೆಯಲು ಸಹಾಯ ಮಾಡಲು 'ಮಿಷನ್ ಭೂಮಿಪುತ್ರ' ಅಡಿಯಲ್ಲಿ ಜಿಲ್ಲಾಧಿಕಾರಿಗಳಿಂದ ಜಾತಿ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು. ಪ್ರವಾಸೋದ್ಯಮವನ್ನು ಉತ್ತೇಜಿಸಲು, ಹಯಾತ್ ಗ್ರೂಪ್‌ನಿಂದ ಕಾಜಿರಂಗದಲ್ಲಿ ಹೋಟೆಲ್ ಅನ್ನು ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ ಎಂದು ಬರುವಾ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.