ADVERTISEMENT

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆ: ಎನ್‌ಡಿಎ– ಇಂಡಿಯಾ ಮೈತ್ರಿ ಎಚ್ಚರಿಕೆ ನಡೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 23:30 IST
Last Updated 27 ಫೆಬ್ರುವರಿ 2026, 23:30 IST
   

ನವದೆಹಲಿ: ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬದಲಾವಣೆಗಳಿಗೆ ಮುನ್ನುಡಿ ಬರೆಯುವ ಸಾಧ್ಯತೆ ಇರುವುದಿಂದ, ಎನ್‌ಡಿಎ ಮತ್ತು ಇಂಡಿಯಾ ಮೈತ್ರಿಕೂಟವು ಎಚ್ಚರಿಕೆಯಿಂದ ಕಣಕ್ಕಿಳಿಯಲು ನಿರ್ಧರಿಸಿವೆ.

ಕೇರಳದಲ್ಲಿ ಸತತ ಎರಡು ಅವಧಿಗೆ ವಿರೋಧ ಪಕ್ಷದ ಕುರ್ಚಿಯಲ್ಲಿ ಕುಳಿತಿದ್ದ ಕಾಂಗ್ರೆಸ್‌, ಈ ಬಾರಿ ವಿವಿಧ ಬಣಗಳನ್ನು ಒಗ್ಗೂಡಿಸುವ ಮೂಲಕ ಮರಳಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ.

ಕೇರಳದಲ್ಲಿ ಎಡಪಕ್ಷಗಳ ವಿರುದ್ಧ ಹೋರಾಡುತ್ತಿರುವ ಕಾಂಗ್ರೆಸ್‌ ಪಶ್ಚಿಮ ಬಂಗಾಳದಲ್ಲೂ ಸಿಪಿಎಂ ಬೆಂಬಲಿಸದಿರಲು ನಿರ್ಧರಿಸಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಅಧಿಕಾರದಿಂದ ಕೆಳಗಿಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಇದು ಪೂರಕವಾಗಿದೆ.

ADVERTISEMENT

ತಮಿಳುನಾಡಿನಲ್ಲಿ ಬಿಜೆಪಿಯು ಎನ್‌ಡಿಎ ನಾಯಕತ್ವವನ್ನು ಎಐಎಡಿಎಂಕೆಗೆ ಬಿಟ್ಟುಕೊಟ್ಟಿದೆ. ಇದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ನೇತೃತ್ವದ ಇಂಡಿಯಾ ಬಣಕ್ಕೆ ಪ್ರಬಲ ಸ್ಪರ್ಧೆ ಒಡ್ಡುವ ನಿರೀಕ್ಷೆ ಇದೆ. 

ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇರುವ ಏಕೈಕ ರಾಜ್ಯ ಅಸ್ಸಾಂ. ಹೀಗಾಗಿ ಅಸ್ಸಾಂ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಅವರು ಈಶಾನ್ಯ ರಾಜ್ಯದ ಮೂಲಸೌಕರ್ಯ ಕ್ಷೇತ್ರಕ್ಕೆ ಭರಪೂರ ಕೊಡುಗೆಯನ್ನು ಪ್ರಕಟಿಸಿದ್ದಾರೆ. 
ಅಸ್ಸಾಂ ಚುನಾವಣೆ ವಿಷಯದಲ್ಲಿ ಕಾಂಗ್ರೆಸ್‌ ಕೂಡ ಹೆಚ್ಚಿನ ಉತ್ಸಾಹ ತೋರಿದ್ದು, ಸಂಸತ್‌ ಅಧಿವೇಶನದ ಸಂದರ್ಭದಲ್ಲೇ ಕಾಂಗ್ರೆಸ್‌ ಮುಖಂಡರು ದೆಹಲಿಯಲ್ಲಿ ಸಭೆ ಸೇರಿ, ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚೆ ನಡೆಸಿದ್ದಾರೆ. 

2024ರ ಲೋಕಸಭಾ ಚುನಾವಣೆಯ ನಂತರ, ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿಯ ಸತತ ಗೆಲುವಿನೊಂದಿಗೆ ಪ್ರಧಾನಿ ಮೋದಿ ಅವರು ತಮ್ಮ ಸ್ಥಾನವನ್ನು ಬಲಪಡಿಸಿಕೊಂಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.