ನವದೆಹಲಿ: ಚೀನಾದ ಸೇನಾಪಡೆಗಳೊಂದಿಗೆ ಲಡಾಖ್ನ ಪೂರ್ವಭಾಗದ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಭಾರತೀಯ ಸೇನೆಯ ಕನಿಷ್ಠ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಸೇನೆ ಮಂಗಳವಾರ ರಾತ್ರಿ ದೃಢಪಡಿಸಿದೆ. ಈ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಸಂಘರ್ಷದಲ್ಲಿ ಚೀನಾ ಪಡೆಗಳಲ್ಲಿಯೂ 43 ಸಾವು–ನೋವು ಸಂಭವಿಸಿದೆ. ಇದರಲ್ಲಿ ಸಾವು ಹಾಗೂ ಗಂಭೀರ ಗಾಯಗೊಡಿರುವ ಪ್ರಕರಣಗಳು ಸೇರಿವೆಎಂದು ಎಎನ್ಐ ವರದಿ ತಿಳಿಸಿದೆ.
ಸೋಮವಾರ ರಾತ್ರಿ ನಡೆದಿದ್ದ ಘರ್ಷಣೆಯಲ್ಲಿ ಭಾರತೀಯ ಸೇನೆಯಕರ್ನಲ್ ಸಂತೋಷ್ ಬಾಬು,ಹವಾಲ್ದಾರ್ ಪಳನಿ ಮತ್ತು ಸಿಪಾಯಿ ಓಝಾಹುತಾತ್ಮರಾಗಿದ್ದರು ಎಂದು ಈ ಹಿಂದೆ ಹೇಳಲಾಗಿತ್ತು.
ಪ್ರಧಾನಿಗೆ ರಾಜನಾಥ್ ಸಿಂಗ್ ಮಾಹಿತಿ:ಗಡಿಯಲ್ಲಿನ ಬೆಳವಣಿಗೆಗಳಿಗೆ ಸಂಬಂಧಿಸಿ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಸೇನೆಯ ಮೂರೂ ಪಡೆಗಳ ಮುಖ್ಯಸ್ಥರ ಜತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ ನಡೆಸಿದ್ದು, ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದ್ದಾರೆ.
‘ಪರಿಸ್ಥಿತಿ ತಿಳಿಗೊಳಿಸುವ ನಿಟ್ಟಿನಲ್ಲಿ ಘಟನಾ ಸ್ಥಳದಲ್ಲಿ ಎರಡೂ ಕಡೆಯಹಿರಿಯ ಸೇನಾಧಿಕಾರಿಗಳ ನಡುವಣ ಮಾತುಕತೆ ಪ್ರಗತಿಯಲ್ಲಿದೆ’ ಎಂದೂ ಮೂಲಗಳು ತಿಳಿಸಿವೆ.
1975ರ ಬಳಿಕ ಇದೇ ಮೊದಲ ಬಾರಿಗೆ ಚೀನಾ ಪಡೆಗಳೊಂದಿಗಿನ ಘರ್ಷಣೆಯಲ್ಲಿ ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಮಧ್ಯೆ, ಪರಿಸ್ಥಿತಿ ತಿಳಿಗೊಳಿಸುವ ನಿಟ್ಟಿನಲ್ಲಿ ಮಂಗಳವಾರ ಮಧ್ಯಾಹ್ನವೇಗಡಿ ಪ್ರದೇಶದಲ್ಲಿ ಮೇಜರ್ ಜನರಲ್ ಮಟ್ಟದ ಮಾತುಕತೆನಡೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಭಾರತ ಹಾಗೂ ಚೀನಾದ ಸೈನಿಕರ ನಡುವೆಗಾಲ್ವಾನ್ ಪ್ರದೇಶದಲ್ಲಿ ಜೂನ್ 15ರ ರಾತ್ರಿ ಘರ್ಷಣೆ ನಡೆದಿತ್ತು. ಭಾರತದ ಗಡಿ ಪ್ರದೇಶದೊಳಗೆ ನಿಂತು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ 17 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದರು ಎಂದು ಭಾರತೀಯ ಸೇನೆ ತಿಳಿಸಿದೆ.
ಘರ್ಷಣೆ ನಡೆದ ಜಾಗಎತ್ತರದಲ್ಲಿದ್ದು,ತಾಪಮಾನಕ್ಕೆ ಶೂನ್ಯಕ್ಕೆ ಕುಸಿದಿತ್ತು. ಚೀನಾ ನಡೆಸಿದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಮ್ಮ 20 ಸೈನಿಕರು ಅತಿಚಳಿಯ ಹೊಡೆತಕ್ಕೂ ಸಿಲುಕಿ ಹುತಾತ್ಮರಾದರು.ದೇಶದ ಪ್ರಾದೇಶಿಕ ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ರಕ್ಷಿಸಲು ನಮ್ಮ ಸೇನೆ ಬದ್ಧವಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.