ಗುವಾಹಟಿ: ಈಶಾನ್ಯ ರಾಜ್ಯಗಳಾದ ಅಸ್ಸಾಂ, ತ್ರಿಪುರಾ, ಮೇಘಾಲಯ ಮತ್ತು ಮಣಿಪುರ ರಾಜ್ಯಗಳಲ್ಲಿ ಮಳೆ ಮುಂದುವರೆದಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ.ಇದುವರೆಗೂ ಈ ರಾಜ್ಯಗಳಲ್ಲಿ 48 ಜನರು ಮೃತಪಟ್ಟಿದ್ದಾರೆ.
ಈ ರಾಜ್ಯಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಜನರು ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತನಾಡಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದ್ದಾರೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ರೀತಿಯ ನೆರವು ನೀಡುವುದಾಗಿಯೂ ಅವರು ಹೇಳಿದ್ದಾರೆ.
ಅಸ್ಸಾಂ, ಮಣಿಪುರ ರಾಜ್ಯಗಳ 36 ಜಿಲ್ಲೆಗಳಲ್ಲಿ 21 ಲಕ್ಷ ಜನರು ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ಸಾಂನಲ್ಲಿ ಕಳೆದ ಎರಡು ದಿನಗಳಲ್ಲಿ 18 ಜನರು ಮೃತಪಟ್ಟಿದ್ದಾರೆ. ಮಣಿಪುರದಲ್ಲಿ 6 ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೇಘಾಲಯದಲ್ಲಿ 7 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯ ಪರಿಣಾಮ ಕಳೆದ 3–4 ದಿನಗಳಲ್ಲಿ 18 ಜನರು ಮೃತಪಟ್ಟಿದ್ದಾರೆ.
ತ್ರಿಪುರಾದಲ್ಲೂ ಮಳೆಯ ಆರ್ಭಟ ಜೋರಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. 6 ಜನರು ಮೃತಪಟ್ಟಿದ್ದಾರೆ ಎಂದು ತ್ರಿಪುರಾಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.