ಗುವಾಹಟಿ: 2024ರ ಲೋಕಸಭಾ ಚುನಾವಣೆಯಲ್ಲಿ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ (ಆರ್ಪಿಐ–ಎ) ಪಕ್ಷವು ಅಸ್ಸಾಂನ ಎರಡು ಸ್ಥಾನಗಳಲ್ಲಿ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಖಾತೆಯ ರಾಜ್ಯ ಸಚಿವ ರಾಮದಾಸ್ ಅಠವಳೆ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಎರಡು ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಬೆನ್ನಲ್ಲೇ ಈಶಾನ್ಯ ಭಾಗದಲ್ಲಿಯೂ ನಮ್ಮ ಪಕ್ಷದ ಖಾತೆಯನ್ನು ತೆರೆಯಬೇಕೆಂಬ ಉದ್ದೇಶವನ್ನು ನಾವು ಹೊಂದಿದ್ದು, ಅಸ್ಸಾಂ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವ ಯೋಜನೆಯನ್ನು ಪಕ್ಷವು ಹೊಂದಿದೆ ಎಂದು ತಿಳಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಪ್ರಸುತ್ತ ಕಾಂಗ್ರೆಸ್ನ ಶಾಸಕ ಅಬ್ದುಲ್ ಖಲೀಕ್ ಪ್ರತಿನಿಧಿಸುತ್ತಿರುವ ಬಾರ್ಪೇಟಾದಲ್ಲಿ ಸ್ಪರ್ಧಿಸುವ ಗುರಿ ಹೊಂದಿದೆ. ಅಸ್ಸಾಂನ ಮತ್ತೊಂದು ಸ್ಥಾನದಲ್ಲಿ ಕಣಕ್ಕಿಳಿಯಲಿದ್ದು, ಮುಸ್ಲಿಂ ಸ್ಥಾನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ದಾರೆ.
ಪಕ್ಷವು ಎನ್ಡಿಎ ಘಟಕವಾಗಿ ಸ್ಪರ್ಧಿಸುತ್ತಿದ್ದು, ಈ ಕುರಿತು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡುತ್ತೇವೆ ಎಂದು ಅಠವಳೆ ಹೇಳಿದ್ದಾರೆ. ಬಾರ್ಪೇಟಾ ಕ್ಷೇತ್ರದಲ್ಲಿ ₹350 ಕೋಟಿ ವೆಚ್ಚದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.